ಚಾಮರಾಜನಗರ: ಚಾಮರಾಜನಗರ, ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಾನು ಬಯಸಿರಲಿಲ್ಲ, ಆದರೆ, ಹೈಕಮಾಂಡ್ ಅವಕಾಶ ಕಲ್ಪಿಸಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ತಾಲೂಕಿನ ಆಲೂರು ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ಸಭೆಯಲ್ಲಿ ಮಾತನಾಡಿ, ಈಗಾಗಲೇ ಮೂರು ಬಾರಿ ಬೇರೆಯವರನ್ನು ಆಯ್ಕೆ ಮಾಡಿದ್ದೀರಿ. ನಾಲ್ಕನೇ ಬಾರಿ ನನಗೆ ಅವಕಾಶ ಕೊಡಿ. ಮೇ.13ರ ನಂತರ ಜನಸೇವಕನಾಗಿ ಕೆಲಸ ಮಾಡುತ್ತೇನೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿರುವುದು ದೈವಶಕ್ತಿಯ ಕೊಡುಗೆಯಾಗಿದೆ ಎಂದು ಹೇಳಿದರು. ಎರಡು ಕಡೆಗಳಲ್ಲೂ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಗೋವಿಂದರಾಜನಗರ ಕ್ಷೇತ್ರದ ಅಭಿವೃದ್ಧಿಯ ಮಾದರಿಯಲ್ಲಿಯೇ ಚಾಮರಾಜನಗರ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇನೆ. ಈಗಾಗಲೇ ಮುಂದಿನ ದಿನಗಳಲ್ಲೂ ಹೆಚ್ಚಿನ ಅಭಿವೃದ್ಧಿ ಮಾಡುವ ಚಿಂತನೆ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.
ಕೇಂದ್ರ ಬರಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಮಾತನಾಡಿ, ಚಾಮರಾಜನಗರ ಕ್ಷೇತ್ರದಲ್ಲಿ ವಿ.ಸೋಮಣ್ಣ ಅವರ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ವಿ.ಸೋಮಣ್ಣ ಅವರು ಅಭಿವೃದ್ಧಿಯ ಹರಿಕಾರರಾಗಿದ್ದು, ಅವರನ್ನು ಗೆಲ್ಲಿಸಬೇಕಿದೆ ಎಂದರು.
ಕೊಣ್ಣೂರು ಮಂಟೇಸ್ವಾಮಿ ದೇವಸ್ಥಾನದಲ್ಲಿ ಪೂಜೆ : ಇದಕ್ಕೂ ಮುನ್ನ ವಿ.ಸೋಮಣ್ಣ ಅವರು ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ಚಾಮರಾಜನಗರ ತಾಲೂಕಿನ ಕೂಡೂರು ಗ್ರಾಮದಲ್ಲಿರುವ ಶ್ರೀಗಣಪತಿ ದೇವಸ್ಥಾನ ಹಾಗೂ ಮಂಟೇಸ್ವಾಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮದಲ್ಲಿ ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಚಾಮರಾಜನಗರ ಕ್ಷೇತ್ರ ಉಸ್ತುವಾರಿ ಕೋಟೆ ಎಂ.ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್, ಮಾಜಿ ಜಿಲ್ಲಾಧ್ಯಕ್ಷ ಸುಂದರ್, ಆಲೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ, ಜಿಪಂ ಮಾಜಿ ಅಧ್ಯಕ್ಷ ಆಲೂರು ನಟರಾಜು, ಜಿಪಂ ಮಾಜಿ ಸದಸ್ಯ ಎ.ಆರ್.ಬಾಲರಾಜ್, ಮುಖಂಡರಾದ ಡಾ.ಎ.ಆರ್.ಬಾಬು, ಅಮ್ಮನಪುರ ಮಲ್ಲೇಶ್, ಕೆಲ್ಲಂಬಳ್ಳಿ ಸೋಮನಾಯಕ, ವೀರಭದ್ರಸ್ವಾಮಿ ಸೇರಿದಂತೆ ಇತರರಿದ್ದರು.