ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಕಾರ್ಯಕ್ರಮ ಜನಮನ ಸೆಳೆಯಿತು.
ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿಂದು ರೈತ ದಸರಾದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ವಿಶೇಷವಾಗಿ ಸಿಂಗರಿಸಿದ್ದ ಎತ್ತಿನ ಗಾಡಿಗಳು ಹಾಗೂ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ ಹಾಗೂ ರೇಷ್ಮೆ ಇಲಾಖೆಯ ಸ್ತಬ್ಧಚಿತ್ರಗಳು ಮೆರವಣಿಗೆಗೆ ಮೆರುಗು ತಂದವು.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭವ್ಯವಾಗಿ ಸಿಂಗಾರಗೊಂಡಿದ್ದ ಎತ್ತಿನಗಾಡಿ ಮೆರವಣಿಗೆಗೆ ಚಾಲನೆ ನೀಡುವ ಮೂಲಕ ರೈತ ದಸರಾ ಕಾರ್ಯಕ್ರಮ ಆರಂಭವಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಜಿಲ್ಲಾಧಿಕಾರಿಯವರಿಗೆ ಸಾಥ್ ನೀಡಿದರು. ಚಾಮರಾಜೇಶ್ವರ ದೇವಸ್ಥಾನದಿಂದ ಆರಂಭಗೊಂಡ ಎತ್ತಿನಗಾಡಿ ಸ್ತಬ್ದ ಚಿತ್ರಗಳ ಮೆರವಣಿಗೆ ನಗರದ ಬಿ. ರಾಚಯ್ಯ ಜೋಡಿರಸ್ತೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಸಾಗಿ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಕೊನೆಗೊಂಡಿತು.
ರೈತ ದಸರಾ ಪ್ರಯುಕ್ತ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಆಹಾರ ಭದ್ರತೆ ಯೋಜನೆ-ನ್ಯೂಟ್ರಿ ಸಿರಿಧಾನ್ಯ ಕಾರ್ಯಕ್ರಮದಡಿ ಜಿಲ್ಲಾಮಟ್ಟದ ಸಿರಿಧಾನ್ಯಗಳ ಹಬ್ಬ ಹಾಗೂ ಕಾರ್ಯಾಗಾರವನ್ನು ವೇದಿಕೆ ಮುಂಭಾಗದಲ್ಲಿ ಆಕರ್ಷಕವಾಗಿ ಚಿತ್ರಿಸಲಾಗಿದ್ದ ರಾಗಿ ಕಣದಲ್ಲಿ ರಾಶಿ ಪೂಜೆ ನೆರವೇರಿಸಲಾಯಿತು. ಬಳಿಕ ಕಾರ್ಯಕ್ರಮದ ದೀಪ ಬೆಳಗಿಸಿ, ಬಿಡಿಸಿದ ತೆಂಗಿನ ಹೊಂಬಾಳೆಯನ್ನು ಪ್ರದರ್ಶಿಸಿ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಜಿಲ್ಲಾ ಕೇಂದ್ರದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಚಾಮರಾಜನಗರ ದಸರಾ ಮಹೋತ್ಸವದಲ್ಲಿ ಆಚರಿಸುವ ವಿಶಿಷ್ಟ ಹಾಗೂ ವಿಭಿನ್ನ ಕಾರ್ಯಕ್ರಮಗಳಲ್ಲಿ ರೈತ ದಸರಾ ಕೂಡ ಒಂದಾಗಿದೆ. ರೈತ ದಸರಾ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ಭಾಗದಿಂದ ಜನರು ಆಗಮಿಸಿ ಮೆರವಣಿಗೆ ಹೆಚ್ಚಿನ ಕಳೆ ತಂದಿದ್ದಾರೆ. ಇದು ಜನರ ದಸರಾವಾಗಿದೆ ಎಂದರು.
ದಸರಾ ಸಂದರ್ಭದಲ್ಲಿ ಇಡೀ ವಿಶ್ವವೇ ಮೈಸೂರಿನ ಕಡೆ ತಿರುಗಿ ನೋಡಲಿದೆ. ಮೈಸೂರಿನ ಸಾಂಸ್ಕೃತಿಕ ವೈಭವವೇ ಇದಕ್ಕೆ ಸಾಕ್ಷಿಯಾಗಿದೆ. ಮೈಸೂರಿನ ಅವಿಭಾಜ್ಯ ಅಂಗವಾಗಿರುವ ಚಾಮರಾಜನಗರದಲ್ಲಿಯೂ ಸಹ ದಸರಾ ಆಯೋಜನೆ ಜಿಲ್ಲೆಯ ಕಲೆ, ಸಂಸ್ಕತಿ, ಪರಂಪರೆಗಳನ್ನು ಅಭಿವ್ಯಕ್ತಗೊಳಿಸುವುದೇ ಆಗಿದೆ. ಗ್ರಾಮೀಣ ಭಾಗದಲ್ಲಿ ನಶಿಸುತ್ತಿರುವ ಜನಪದ ಕಲೆಗಳಿಗೆ ಮರುಜೀವ ನೀಡಬೇಕಾಗಿದೆ ಎಂದು ತಿಳಿಸಿದರು.