ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಗುಂಡ್ಲುಪೇಟೆ, ಚಾಮರಾಜನಗರ, ಹನೂರು ತಾಲೂಕಿನ ಎಲ್ಲ ಕೆರೆಗಳು ತುಂಬಿ ಹರಿಯುತ್ತಿವೆ.
ನದಿಗಳು ಮತ್ತು ತೊರೆಗಳು ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿದ್ದು, ನೂರಾರು ಎಕರೆ ಭತ್ತ ಮತ್ತು ಜೋಳದ ಗದ್ದೆಗಳಲ್ಲಿನ ಬೆಳೆಗಳು ಸಹ ನಾಶವಾಗಿವೆ. ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ 1,400 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮರಗದಕೆರೆ, ಕೋಡಿಮೋಳೆ ಸೇರಿದಂತೆ ನಾನಾ ಕೆರೆಗಳಿಂದ ಸುವರ್ಣಾವತಿ ನದಿಗೂ ಅಧಿಕ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಹೆಚ್ಚಾಗಿದ್ದು, ಗದ್ದೆಗಳಿಗೆ ನೀರು ನುಗ್ಗಿದೆ. ಯಳಂದೂರಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಮೋಳೆ, ದೊಡ್ಡಮೋಳೆ, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಕೆರೆಗಳು ಒತ್ತುವರಿಯಾಗಿ ನೀರು ತುಂಬಿದೆ.
ಭಾರೀ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಳೆದ 3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೂಗ್ಯಂ ಜಲಾಶಯ ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದ್ದು, ಕೊಳ್ಳೇಗಾಲ-ರಾಮಾಪುರ ರಸ್ತೆ ತಡೆದು ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ರಾಂಪುರದಿಂದ ಹೂಗ್ಯಂ ಗ್ರಾಮಕ್ಕೆ ಹೋಗುತ್ತಿದ್ದ ಬೊಲೆರೊ ವಾಹನದ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಹೂಗ್ಯಂ ಪಟ್ಟಣ ಮುಖ್ಯರಸ್ತೆಯಲ್ಲಿ 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದರಿಂದ ಕತ್ತಲು ಆವರಿಸಿದೆ. ಗುಂಡ್ಲುಪೇಟೆ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೇಗೂರು, ಬೆಳಚವಾಡಿ ರಸ್ತೆಯಲ್ಲೆಲ್ಲ ನೀರು ಹರಿಯುತ್ತಿದೆ. ಶಾಲಾ ಆವರಣ, ಮನೆಗಳಿಗೆ ನೀರು ನುಗ್ಗಿ ಅವ್ಯವಸ್ಥೆ ಸೃಷ್ಟಿಯಾಗಿದೆ.
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಕಾಲು ಮತ್ತು ಕೈಗಳ ನಿಯಂತ್ರಣ ಕಳೆದುಕೊಂಡ ಘಟನೆ ನಡೆದಿದೆ. ಸಂತ್ರಸ್ತೆಯನ್ನು ಹನೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಳೆಯಿಂದ ನಷ್ಟವಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.