ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಯಾತ್ರ ಸ್ಥಳ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಡ್ರೋನ್ ಮತ್ತು ಕ್ಯಾಮರಾ ಚಿತ್ರೀಕರಣಕ್ಕೆ ತಹಸೀಲ್ದಾರ್ ನಿಷೇಧ ಹೇರಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಜೋನ್ನಲ್ಲಿರುವ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು, ಪ್ರವಾಸಿಗರು, ಭೇಟಿ ನೀಡುತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಅಲ್ಲದೆ ಸಂಜೆಯಾಗುತ್ತಿದ್ದಂತೆ ಕಾಡಾನೆಯೊಂದು ದೇವಾಲಯದ ಬಳಿ ಬರುವುದು ಎಲ್ಲರಿಗೂ ತಿಳಿದ ವಿಷಯವಾಗಿರುತ್ತದೆ. ಅದು ಕಾಡಾನೆ ಎಂದು ತಿಳಿದಿದ್ದರೂ ಸಹ ಪ್ರವಾಸಿಗರು ಅದರ ಸನಿಹಕ್ಕೆ ತೆರಳಿ ಛಾಯಾಚಿತ್ರ ತೆಗೆಯುವುದು, ಸೆಲ್ಪಿ ತೆಗೆಯುವ ತುಣುಕುಗಳು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಹಾಗೂ ಕಾಡಾನೆಯಿಂದ ಜನರಿಗೆ ಅಥವಾ ಜನರಿಂದ ಕಾಡಾನೆಗೆ ತೊಂದರೆಯಾಗಬಹುದಾಗಿದ್ದು, ಇದನ್ನು ತಡೆಯುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಜರುಗದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗೋಪಾಲಸ್ವಾಮಿ ಬೆಟ್ಟ ವಲಯ ಮೇಲುಕಾಮನಹಳ್ಳಿ ವಲಯ ಅರಣ್ಯಧಿಕಾರಿಗಳು ಕೋರಿರುತ್ತಾರೆ.
ಅದರಂತೆ ಮುಂಜಾಗ್ರತಾ ಕ್ರಮವಾಗಿ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತ ಮುತ್ತ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಮೂಲಕ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.