ಕೊಳ್ಳೇಗಾಲ: ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸದಸ್ಯರೊಬ್ಬರು ಅವಿಶ್ವಾಸ ಮಂಡನೆ ವೇಳೆ ಅವಿಶ್ವಾಸಕ್ಕೆ ಸೋಲು ಕಂಡಿದ್ದರಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿ ಆಸ್ಪತ್ರೆಗೆ ಸೇರಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ಟಗರಪುರ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆ ವಿದ್ಯಾ ರವರ ವಿರುದ್ದವಾಗಿ 19 ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರು. ಆದರೆ ಅವಿಶ್ವಾಸ ಮಂಡನೆ ವೇಳೆ 13 ಮಂದಿ ಮಾತ್ರ ಹಾಜರಾಗಿದ್ದರಿಂದ ಅವಿಶ್ವಾಸ ಸೋಲಾಯಿತು. ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾಗಿದ್ದ ಹೊಸ ಮಾಲಂಗಿ ಗ್ರಾಮದ ರಾಜಮ್ಮ ಬೇಸತ್ತು ಗ್ರಾಮಕ್ಕೆ ತೆರಳುವಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೂಡಲೇ ರಾಜಮ್ಮರವರೊಂದಿಗಿದ್ದ ಬೆಂಬಲಿಗರು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲು ಮಾಡಿದಾಗ ಡಾ.ಬಸವರಾಜು ರವರು ಸೂಕ್ತ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.