ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿದ್ದ ತಾಯಿ ಮತ್ತು ಮಗನಿಗೆ ಚಾಮರಾಜನಗರ ಜಿಲ್ಲಾ ಬಾಲಾಪರಾಧಿ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಶಿಕ್ಷೆಗೊಳಗಾದವರನ್ನು ತಾಯಿ ಸೆಲ್ವಿ (42) ಮತ್ತು ಅವರ ಮಗ ಶರಣ್ ರಾಜ್ (25) ತಮಿಳುನಾಡಿನ ತಿರ್ಚಂಗೂರ್ ತಾಲ್ಲೂಕಿನವರು ಎಂದು ಗುರುತಿಸಲಾಗಿದೆ.
ಪ್ರಾಸಿಕ್ಯೂಷನ್ ಪ್ರಕಾರ ಶರಣ್ ರಾಜ್ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿದ್ದ ಮತ್ತು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆತನ ತಾಯಿ ಮಗನಿಗೆ ಸಹಾಯ ಮಾಡಿದ್ದರು. . ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಿಶಾರಾಣಿ ಅವರು ತಾಯಿ ಮತ್ತು ಮಗನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದರು.
ಶರಣ್ ರಾಜ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಸೆಲ್ವಿ ಪೇಪರ್ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದರು. 2018ರ ಸೆಪ್ಟೆಂಬರ್ 9ರಂದು ಹನೂರು ತಾಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿಯನ್ನು ಶರಣ್ ರಾಜ್ ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದ. ಬಳಿಕ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿ ಸೆಲ್ವಿ ಮತ್ತು ಸಂಬಂಧಿ ಶಶಿಕುಮಾರ್ ಕೃತ್ಯಕ್ಕೆ ಸಹಕರಿಸಿದ್ದಾರೆ.
ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಮಹೇಶ್ ಅವರು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಶಶಿಕುಮಾರ್ ತಲೆಮರೆಸಿಕೊಂಡಿದ್ದು, ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ಬಾಲಾಪರಾಧಿ ನ್ಯಾಯಾಲಯದ ನ್ಯಾಯಮೂರ್ತಿ ನಿಶಾರಾಣಿ ಇಬ್ಬರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಸಜೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದರು. ಅಲ್ಲದೆ, ನೊಂದ ಬಾಲಕಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶಿಸಿದರು. ಮುಂದಿನ 30 ದಿನಗಳಲ್ಲಿ. ದೂರುದಾರರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.