ಚಾಮರಾಜನಗರ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರು ಹಾಗೂ ಯುವಕರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಆದರೆ, ರಾಜ್ಯದ ರೈತರಿಗೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನೀಡದೆ ಮೋಸ ಮಾಡಿದೆ ಎಂದು ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪೂರ್ ಆರೋಪಿಸಿದರು.
ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ, ಸ್ತ್ರೀಶಕ್ತಿ ಯೋಜನೆ ಹಾಗೂ ಯುವಕರಿಗೆ ಯುವನಿಧಿ ಹಣ ನೀಡಲಾಗುತ್ತಿದೆ. ಆದರೆ, ರೈತರಿಗೆ ಯಾವ ಗ್ಯಾರಂಟಿ ಕೊಟ್ಟಿದ್ದೀರ ಎಂದು ಪ್ರಶ್ನಿಸಿದ ಅವರು ರೈತರಿಗೆ ಸಿಗಬೇಕಾದ ಬರ ಪರಿಹಾರ ನೀಡಿಲ್ಲ. ಅಲ್ಲದೇ ರೈತರ ಜಮೀನುಗಳಿಗೆ ದಿನನಿತ್ಯ 7 ಗಂಟೆ ನಿರಂತರ ವಿದ್ಯುತ್ ನೀಡದೆ ತಾರತಮ್ಮ ಮಾಡುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಚುನಾವಣೆ ಎದುರಿಸುತ್ತಿದ್ದೇವೆ. ಈಗಾಗಲೇ ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿಗೆ 25 ಹಾಗೂ ಜೆಡಿಎಸ್ಗೆ 3 ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ನರೇಂದ್ರ ಮೋದಿ ಅವರು 10 ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದಂತೆ 10 ವರ್ಷಗಳ ಅವಧಿಯಲ್ಲಿ ಯಾವುದೆ ಹಗರಣಗಳಿಲ್ಲ ಎಂದರು.
ಈ ಹಿಂದೆ ಬಿಜೆಪಿಯೊಂದಿಗೆ 20 ತಿಂಗಳು 14 ಕಾಲ ನಡೆದ ಆಡಳಿತದಲ್ಲಿ ಸಚಿವನಾಗಿದ್ದು, ಬಿಜೆಪಿಯೊಂದಿಗೆ ಇದ್ದ ಕಂಫರ್ಟಬಲ್ ಕಾಂಗ್ರೆಸ್ನೊಂದಿಗೆ ಇರಲಿಲ್ಲ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದರು.
5 ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಜನರನ್ನು ದಿಕ್ಕು ತಪ್ಪಿಸುತ್ತಿದೆ. 5 ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಿಗುತ್ತಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 18 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ ಎಂದು ರಾಜ್ಯ ಹೇಳುತ್ತಿದೆ. 18 ಸಾವಿರ ಕೋಟಿಯನ್ನು ರೈತರಿಗೆ ನೀಡಿ ನಂತರ ಮಾತನಾಡಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಿಂದ ದಿವಾಳಿಯಾಗಿದೆ ಎಂದರು.
ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ 2018 ರಲ್ಲಿ 25 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ, ಯಾವುದೇ ನೀರಾವರಿ ಯೋಜನೆಗಳಿಲ್ಲ ಎಸ್ ಇ ಪಿ, ಟಿ ಎಸ್ ಪಿ ಯೋಜನೆಯ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಮೂಲಕ 5 ಲಕ್ಷದ ತನಕ ಉಚಿತವಾಗಿ ಆರೋಗ್ಯ ಸೇವೆಗಳನ್ನು ಒದಗಿಸಿದೆ. ಅಲ್ಲದೇ ಜಲ ಜೀವನ್ ಮಿಷನ್ ಅಡಿ ನೀರು ಪೂರೈಸುತ್ತಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಭ್ರಮೆಯಾಗಿದೆ ಎಂದು ಲೇವಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎನ್. ಮಹೇಶ್, ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಜೆಡಿಎಸ್ ರಾಜ್ಯ ವಕ್ತಾರ ಸಿ.ಎಂ. ನಾಗರಾಜು, ಜೆಡಿಎಸ್ ಮುಖಂಡ ಬಿ. ಪುಟ್ಟಸ್ವಾಮಿ, ಬಿಜೆಪಿ ಮುಖಂಡ ಸಿ.ಎನ್. ಬಾಲರಾಜ್, ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್ ಇದ್ದರು.