ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ 108 ಅಡಿ ಎತ್ತರದ ಮಾಯಕರ ಮಾದಪ್ಪ ದೇವರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಿದರು. ಇದೇ ಸಂದರ್ಭ ಪ್ರಾಧಿಕಾರ ನಿರ್ಮಿಸಿರುವ ಬೆಳ್ಳಿ ರಥವನ್ನು ಲೋಕಾರ್ಪಣೆ ಮಾಡಲಾಯಿತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗುವುದು. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದೇನೆ, ದೇವರ ಆಶೀರ್ವಾದ, ಕೃಪೆ ಎಲ್ಲರ ಮೇಲಿದೆ ಎಂದರು.
ಎನ್ಎಚ್ಎಂ ಗುತ್ತಿಗೆ ನೌಕರರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅವರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಇಡೀ ದೇಶವೇ ಹೆಮ್ಮೆ ಪಡಬೇಕಾದ ಕೆಲಸ, ಇಡೀ ದೇಶವೇ ಮೈಸೂರಿಗೆ ಸಂಪರ್ಕ ಕಲ್ಪಿಸುತ್ತದೆ, ಇಂತಹ ಒಳ್ಳೆಯ ಕೆಲಸಗಳಿಗೆ ಪ್ರಧಾನಿಯಲ್ಲದೆ ಬೇರೆ ಯಾರನ್ನು ಆಹ್ವಾನಿಸಬೇಕು ಎಂದು ಪ್ರತಿಪಕ್ಷಗಳ ಟೀಕೆಗೆ ಬೊಮ್ಮಾಯಿ ತಿರುಗೇಟು ನೀಡಿದರು. ಮೋದಿ ? ಮೊದಲ ಮಳೆಯಿಂದ ಸಣ್ಣ ಪುಟ್ಟ ಸಮಸ್ಯೆ ಎದುರಾಗಿದ್ದು, ಶೀಘ್ರವೇ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದರು.
ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟದ ದೇವಸ್ಥಾನದಲ್ಲಿ ಬೆಳ್ಳಿ ರಥ ಸಮರ್ಪಿಸಲಾಯಿತು. 560 ಕೆಜಿ ಬೆಳ್ಳಿ ಬಳಸಿ ಪ್ರಾಧಿಕಾರ ನಿರ್ಮಿಸಿರುವ ಬೆಳ್ಳಿ ರಥ ಇದಾಗಿದ್ದು, ಮಲೆಮಹದೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಬಿಜೆಪಿ ಒಗ್ಗಟ್ಟಿನ ಪ್ರದರ್ಶನವಾಗಿದ್ದರೂ ಸಿಎಂ ಹಾಗೂ ಸೋಮಣ್ಣ ಕಾಂಬಿನೇಷನ್ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ. ಬಿಎಸ್ ಯಡಿಯೂರಪ್ಪ ಮತ್ತು ಸೋಮಣ್ಣ ನಡುವಿನ ಮುಸುಕಿನ ಗುದ್ದಾಟ ಮಾದಪ್ಪ ಬೆಟ್ಟದಲ್ಲಿ ಕೊನೆಗಾಣಲಿದೆ ಎಂದು ಭಾವಿಸಲಾಗಿತ್ತು. ಆದರೆ ಸಿಎಂ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಚಿಕ್ಕಮಗಳೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಬೇಕಿದ್ದ ಕಾರಣ ಬಿಎಸ್ ವೈ ಇಂದಿನ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಯೋಜನೆಯಲ್ಲಿ ₹20 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಮಲೆ ಮಹದೇಶ್ವರ ಮೂರ್ತಿ ನಿರ್ಮಿಸಲಾಗಿದೆ. ಸದ್ಯ ಪ್ರತಿಮೆ ನಿರ್ಮಾಣ ಕಾರ್ಯ ಮಾತ್ರ ಮುಗಿದು ಉದ್ಘಾಟನೆಯಾಗಿದೆ. ಮುಂದಿನ ದಿನಗಳಲ್ಲಿ ಮಹದೇಶ್ವರಸ್ವಾಮಿ ಜೀವನ ಕುರಿತ ವಸ್ತು ಸಂಗ್ರಹಾಲಯ, ಪ್ರತಿಮೆ ಇರುವ ಜಾಗದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕೆ ವನಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಲಾಗುವುದು ಎಂದು ಸಿಎಂ ತಿಳಿಸಿದರು.