ಹನೂರು: ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾಹದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ ಬಸ್ ಗಳನ್ನು ಬಿಡಲಾಗಿತ್ತು. ಆದರೆ ಈ ವಿಶೇಷ ಬಸ್ ಗಳಲ್ಲಿ ಪಾಸ್ ಇರುವ ಮಕ್ಕಳನ್ನು ಕರೆದುಕೊಂಡು ಹೋಗದ ಹಿನ್ನೆಲೆ ಸಾವಿರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಜಮಾಯಿಸಿ ಎಲ್ಲ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ವಿದ್ಯಾರ್ಥಿಗಳು ವಿಶೇಷ ಜಾತ್ರಾ ಹಬ್ಬ ಹರಿದಿನ ಸಂದರ್ಭದಲ್ಲಿ ನಮಗೆ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಾಲೇಜಿನಲ್ಲಿ 10 ನಿಮಿಷ ತಡವಾಗಿ ಹೋದರೂ ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ, ಇದರಿಂದ ನಮಗೆ ತೀವ್ರ ಸಮಸ್ಯೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕುರಟಿ ಹೊಸೂರು ಗ್ರಾಮದ ನವ್ಯಶ್ರೀ ಮಾತನಾಡಿ ಕೆ ಎಸ್ ಆರ್ ಟಿ ಸಿ ಬಸ್ ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.