ಚಾಮರಾಜನಗರ: ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್ಸಿ) ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಮಲೈ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆದೇಶ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದರು.
ತಮಿಳು ನಾಡಿಗೆ ನೀರು ಬಿಡಲು ನಮ್ಮ ಬಳಿ ನೀರಿನ ಸಂಗ್ರಹವಿಲ್ಲ. ಈ ನಿಟ್ಟಿನಲ್ಲಿ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನೀರಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಈ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದರು.
ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ವಿಚಾರದ ಕುರಿತು ಮಾತನಾಡಿ ”ಹಿಂದಿನ ಅಧಿಕಾರಾವಧಿಯಲ್ಲಿ ಚಾಮರಾಜನಗರಕ್ಕೆ 12 ಬಾರಿ ಭೇಟಿ ನೀಡಿ ಸುಭದ್ರ ಸರಕಾರ ನೀಡಿದ್ದೆ, ಇಂದು ಕೆಡಿಪಿ ಸಭೆ ನಡೆಸುತ್ತಿದ್ದೇನೆ, ಭೀಕರ ಬರಗಾಲ ಇರುವುದರಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಮಹದೇಶ್ವರ ದೇವರನ್ನು ನಂಬಿದ್ದೇನೆ. ದೇವರ ಆಶೀರ್ವಾದದಿಂದ ಉತ್ತಮ ಮಳೆಯಾಗಲಿ,’’ ಎಂದರು.