ಯಳಂದೂರು: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ 01 ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ. ಎಂ.ಮಂಜುನಾಥ್ ತಿಳಿಸಿದರು.
ಪಟ್ಟಣದಲ್ಲಿರುವ ಸರ್ಕಾರಿ ಕಚೇರಿಗಳಿಗೆ ತೆರಳಿ ಸರ್ಕಾರಿ ನೌಕರರ ಸಂಘದ ಮನವಿಯ ಭಿತ್ತಿಪತ್ರವನ್ನು ನೀಡಿ, ಮುಷ್ಕರ ಬೆಂಬಲಿಸುವಂತೆ ಮನವಿ ಸಲ್ಲಿಸಿ ಮಾತನಾಡಿ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಜಾರಿಗೊಳಿವಂತೆ, ಹಳೆ ಪಿಂಚಣಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸಲಾಗುವುದು. ಸರ್ಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆವಿಗೂ ತಮ್ಮ ಹೋರಾಟ ನಿಲ್ಲುವುದಿಲ್ಲ. ರಾಜ್ಯಾದ್ಯಂತ ಧರಣಿ ನಡೆಯಲಿದ್ದು, ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಾಲಿನ ಬಜೆಟ್ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಸ್ಕರಣೆ ಬಗ್ಗೆ ಪ್ರಸ್ತಾಪ ಮಾಡದಿರುವುದು ನೌಕರರಿಗೆ ನಿರಾಸೆ ತಂದಿದೆ. ಹಳೆ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಅದು ಜಾರಿಯಾಗುವರೆಗೂ ಸರ್ಕಾರಿ ನೌಕರರೆಲ್ಲರೂ ಕರ್ತವ್ಯಕ್ಕೆ ಹಾಜರಾಗದೆ ಮನೆಯಲ್ಲೇ ಇರಲಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲೂ ಫೋಟೊ, ಸ್ಟೇಟಸ್ನಲ್ಲಿ ಭಿತ್ತಿಪತ್ರಗಳನ್ನು ಹಾಕಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ರಾಜ್ಯದ ಎನ್ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಪಂಜಾಬ್, ರಾಜಸ್ಥಾನ, ಛತ್ತೀಸಗಡ, ಜಾಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನ್ಪಿಎಸ್ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಧರಣಿ ಸಂಬಂಧ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಮ್ಮನಪುರ ಮಹೇಶ್, ಉಪಾಧ್ಯಕ್ಷ ನಂಜುಂಡ, ಖಜಾಂಚಿ ರಮೇಶ್, ರಾಜ್ಯ ಪರಿಷತ್ ಸದಸ್ಯ ಗೋವಿಂದ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಸೋಮಣ್ಣ, ನಾಗರಾಜು, ನಂಜುಂಡಸ್ವಾಮಿ, ರುದ್ರಯ್ಯ, ದೇವನಾಯಕ, ನದೀಮ್, ಮಾನಸ, ಮಾದಪ್ಪ ಸೇರಿದಂತೆ ಇತರರು ಹಾಜರಿದ್ದರು.