ಯಳಂದೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ನಿರಂತರ ಮಳೆಗೆ ಅನೇಕ ಕೆರೆಗಳು ಕೋಡಿ ಬಿದ್ದಿದ್ದಲ್ಲದೆ, ಇನ್ನು, ಕೆಲವು ಕೆರೆಗಳು ಒಡೆದು ಹೋಗಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ಸಂತ್ರಸ್ತರಾಗಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವವರನ್ನು ಭೇಟಿ ಮಾಡಿದ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮಸ್ಯೆ ಆಲಿಸಿ ಸಾಂತ್ವನ ಹೇಳಿದರು.
ಮಳೆಯಿಂದ ತಗ್ಗು ಪ್ರದೇಶದ ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಹೀಗಾಗಿ ಸಚಿವರಾದ ವಿ.ಸೋಮಣ್ಣ ಜಿಲ್ಲೆಯ ವಿವಿಧೆಡೆಗೆ ಭೇಟಿ ನೀಡಿದರು. ಕೊಳ್ಳೇಗಾಲ ಪಟ್ಟಣಕ್ಕೆ ಭೇಟಿ ನೀಡಿ ಸರ್ಕ್ಯೂಟನ್ ಕಾಲುವೆಯನ್ನು ವೀಕ್ಷಿಸಿದ ಸಚಿವರು ಸುಗಮವಾಗಿ ನೀರು ಹೋಗಲು ವ್ಯವಸ್ಥೆ ಮಾಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮಕ್ಕೆ ತೆರಳಿ ಹಾನಿಗೀಡಾದ ಮನೆಗಳನ್ನು ಖುದ್ದು ಭೇಟಿ ನೀಡಿ, ಪರಿಶೀಲನೆ ಮಾಡಿ ವೀಕ್ಷಿಸಿದರಲ್ಲದೇ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಮೂರೂವರೆ ಲಕ್ಷರೂ.ಗಳ ಪರಿಹಾರ ಕೊಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಆ ನಂತರ ಫುಡ್ಕಿಟ್ಗಳನ್ನು ಸಂತ್ರಸ್ತರಿಗೆ ವಿತರಿಸಿದ ಸಚಿವರು, ಮಳೆ ಹಾನಿಯಿಂದ ಅಗರ ಗ್ರಾಮದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಖುದ್ದು ಅವರ ಸಮಸ್ಯೆಗಳನ್ನು ಆಲಿಸಿದರು. ಅವರಿಗೆ ಸಮಯಕ್ಕೆ ಸರಿಯಾಗಿ ತಿಂಡಿ ಊಟ ವಸತಿ ಸೇರಿದಂತೆ ಬೇಕಾದ ಮೂಲಸೌಕರ್ಯ ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಳಜಿ ಕೇಂದ್ರದಲ್ಲಿದ್ದ ನಿರಾಶ್ರಿತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಮಳೆಯಿಂದ ಹಾನಿಗೊಳಗಾದ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕವಾಗಿ 10 ಸಾವಿರರೂ.ಗಳ ನೆರವು ನೀಡಿದ್ದು, ಭಾಗಶಃ ಮನೆಕಳೆದುಕೊಂಡವರಿಗೆ ಮೂರೂವರೆ ಲಕ್ಷರೂ.ಗಳು ಪೂರ್ಣ ಮನೆ ಕಳೆದುಕೊಂಡವರಿಗೆ ಐದು ಲಕ್ಷರೂಗಳ ನೆರವನ್ನು ಸರ್ಕಾರದ ವತಿಯಿಂದ ನೀಡಲಾಗುವುದು. ಯಾರು ಆತಂಕಕ್ಕೆ ಒಳಗಾಗಬಾರದು. ಸಂಕಷ್ಟದ ಸಮಯದಲ್ಲಿ ಸರ್ಕಾರ ನಿಮ್ಮ ನೆರವಿಗೆ ಧಾವಿಸಲಿದೆ ಎಂದು ಆತ್ಮಸ್ಥೈರ್ಯ ತುಂಬಿದರು.