ಮೈಸೂರು: ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿಬೆಟ್ಟದಲ್ಲಿ ಭಾನುವಾರ ಬೆಳಗ್ಗೆ 10.15ರಿಂದ 10.36ರ ಶುಭ ವೃಶ್ಚಿಕ ಲಗ್ನದಲ್ಲಿ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ದಸರಾಗೆ ಚಾಲನೆ ನೀಡಲಿದ್ದಾರೆ.
ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಕಲಾಮಂದಿರದಲ್ಲಿ 11.30ಕ್ಕೆ ದಸರಾ ಚಲನಚಿತ್ರೋತ್ಸವಕ್ಕೆ ಸಚಿವ ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆಯನ್ನ ಕುಪ್ಪಣ್ಣ ಪಾರ್ಕ್ನಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಮೈದಾನದಲ್ಲಿ ನಡೆಯುವ ಆಹಾರ ಮೇಳವನ್ನು ಮಧ್ಯಾಹ್ನ 1 ಗಂಟೆಗೆ ಸಚಿವ ಕೆಹೆಚ್ ಮುನಿಯಪ್ಪ ಉದ್ಘಾಟಿಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. 4.30ಕ್ಕೆ ವಸ್ತು ಪ್ರದರ್ಶನವನ್ನೂ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸೆನೆಟ್ ಭವನದಲ್ಲಿ ಯೋಗ ದಸರಾವನ್ನು ಮಹದೇವಪ್ಪ ಅವರು ಉದ್ಘಾಟಿಸಲಿದ್ದಾರೆ. ಕಲಾಮಂದಿರದಲ್ಲಿ ಸಂಜೆ 5 ಗಂಟೆಗೆ ಅಖಿಲ ಭಾರತ, ರಾಜ್ಯ ಮಟ್ಟದ ಚಿತ್ರ ಶಿಲ್ಪ ಕಲಾ ಪ್ರದರ್ಶನವನ್ನು ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ. ಬಳಿಕ ಓವಲ್ ಮೈದಾನದಲ್ಲಿ ದಸರಾ ಪುಸ್ತಕ ಮಾರಾಟ ಮೇಳ ಹಾಗೂ ಸಂಜೆ 5.30ಕ್ಕೆ ರಂಗಾಯಣದಲ್ಲಿ ನವರಾತ್ರಿ ರಂಗೋತ್ಸವಕ್ಕೆ ತಂಗಡಗಿ ಚಾಲನೆ ನೀಡಲಿದ್ದಾರೆ.
ಸಂಜೆ 6.30ಕ್ಕೆ ವಿದ್ಯುತ್ ದೀಪಾಲಂಕಾರ ಕಾರ್ಯಕ್ರಮವನ್ನು ಸಚಿವ ಕೆಜೆ ಜಾರ್ಜ್ ಅವರು ಉದ್ಘಾಟಿಸಲಿದ್ದಾರೆ. ಸಂಜೆ 7 ಗಂಟೆಯಿಂದ ಆರಂಭವಾಗುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.