ಮೈಸೂರು: ಆಹಾರಗಳ ಗುಣಮಟ್ಟ ಪರೀಕ್ಷಿಸಿ, ಆಹಾರಗಳಲ್ಲಿ ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೋಟೆಲ್ಗಳು, ಬೇಕರಿಗಳು, ಆಹಾರ ಮಾರಾಟ ಕೇಂದ್ರಗಳಲ್ಲಿ ಕಲಬೆರಕೆ ಮಾಡಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಪ್ರಕರಣಗಳು ಕಂಡು ಬರುತ್ತವೆ. ಇವುಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನರ ಆರೋಗ್ಯ ಕಾಪಾಡಬೇಕು. ಕೆಟ್ಟ ಕೊಲೆಸ್ಟ್ರಾಲ್ ಇರುವ ಎಣ್ಣೆಯನ್ನು ಬಳಸುತ್ತಾರೆ. ಇದರಿಂದ ಜನರ ಆರೋಗ್ಯ ಹಾಳಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಗಳು ಕಂಡುಬರುತ್ತವೆ. ಆಹಾರ ಉತ್ಪಾದನೆಯಲ್ಲಿ ಸ್ವಚ್ಛತೆ ಕಾಪಾಡುವುದಿಲ್ಲ. ಆರೋಗ್ಯಕ್ಕೆ ತೊಂದರೆ ಉಂಟುಮಾಡುವ ಬಣ್ಣಗಳನ್ನು ಬೇಕರಿ ಉತ್ಪನ್ನಗಳು, ಸಿಹಿ ತಿಂಡಿಗಳು, ರಸ್ತೆ ಬದಿ ಮಾರುವ ಜಂಕ್ ಫುಡ್ಗಳ ತಯಾರಿಕೆಯಲ್ಲಿ ಬಳಸುತ್ತಾರೆ ಇದನ್ನು ಪರಿಶೀಲಿಸಿ ಇಂಥವರ ಮೇಲೆ ಪ್ರಕರಣಗಳನ್ನು ದಾಖಲಿಸಿ ತಡೆಗಟ್ಟಬೇಕು ಎಂದು ತಿಳಿಸಿದರು.
ಆಹಾರ ಉತ್ಪನ್ನಗಳನ್ನು ತಯಾರಿಸುವ ಸಿಬ್ಬಂದಿಗಳು ಸ್ವಚ್ಚತೆ ಕಾಪಾಡಬೇಕು. ಮಾಂಸ ಹಾಗೂ ಚಿಕನ್ ಅಂಗಡಿಯವರು ಸ್ವಚ್ಛತೆ ಕಾಪಾಡಿಕೊಂಡು, ತ್ಯಾಜ್ಯಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ತರಕಾರಿ ಹಾಗೂ ಹಣ್ಣುಗಳನ್ನು ಹೆಚ್ಚು ಕಾಲ ಕೆಡದಂತೆ ಕಾಪಾಡಲು ವ್ಯಾಕ್ಸ್ ಬಳಸುತ್ತಾರೆ ಇದರ ಬಳಕೆಯಿಂದ ಆರೋಗ್ಯ ಹಾಳಾಗುತ್ತದೆ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಅಂಕಿತ ಅಧಿಕಾರಿ ಡಾ.ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪ್ಥಿತರಿದ್ದರು.