ನಂಜನಗೂಡು: ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಯ ಕಣ ರಂಗೇರಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹನುಮಯ್ಯ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು.
ನಂಜನಗೂಡು ತಾಲ್ಲೂಕು ಆಡಳಿತ ಭವನಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿ, ಅರವಿಂದ್ ಕ್ರೇಜಿವಾಲ್ ನೇತೃತ್ವದ ಸರ್ಕಾರದಲ್ಲಿ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅದನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ, ಮನೆ ಮನೆ ಪ್ರಚಾರ ನಡೆಸುತ್ತಿದ್ದೇವೆ. ಆಮ್ ಆದ್ಮಿ ಪಕ್ಷಕ್ಕೆ ಜನರು ಬೆಂಬಲ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರವನ್ನು ಹಿಂಪಡೆಯುವ ಮಾತೇ ಇಲ್ಲ. ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರದ ಜನರು ನನಗೊಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ವೀರೇಶ್ ಕುಮಾರ್ ಮಾತನಾಡಿ, ಜನರು ಯಾವುದೇ ಆಮಿಷಕ್ಕೆ ಒಳಗಾಗದೆ, ಮತವನ್ನು ಚಲಾವಣೆ ಮಾಡಬೇಕು. ಬಿಜೆಪಿ ಸರ್ಕಾರ ಗಾಳಿ ಮತ್ತು ಬಿಸಿಲನ್ನು ಬಿಟ್ಟು ಎಲ್ಲದಕ್ಕೂ ತೆರಿಗೆಯನ್ನು ವಿಧಿಸಿದೆ. ಆಮ್ ಆದ್ಮಿ ಪಕ್ಷವು 224 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದೇವೆ. ಸುಮಾರು 40 ಕ್ಷೇತ್ರಗಳಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ತಾಲೂಕು ಅಧ್ಯಕ್ಷ ವೀರೇಶ್ ಕುಮಾರ್, ಕಾರ್ಮಿಕ ವಿಭಾಗದ ಅಧ್ಯಕ್ಷ ಮಂಜು, ಪೂರ್ಣಿಮಾ ಭಾಗವಹಿಸಿದ್ದರು.