ನಂಜನಗೂಡು: ಹನುಮ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ನಂಜನಗೂಡು ನಗರದಾದ್ಯಂತ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನ ನಡೆಸಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡೆ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಇಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆವರಣದಿಂದ ಹನುಮ ಜಯಂತಿ ಮೆರವಣಿಗೆ ಪ್ರಾರಂಭವಾಗಲಿದೆ. ರಾತ್ರಿ 10 ಗಂಟೆಗೆ ಮುಕ್ತಾಯವಾಗಲಿದೆ. ಐದರಿಂದ ಏಳು ಸಾವಿರ ಇಂದು ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಈಗಾಗಲೇ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ 50 ಸಿ ಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. 1 ಎಸ್ ಪಿ, 2ಎಎಸ್ಪಿ, 5 ಡಿವೈಎಸ್ಪಿ, 17 ಇನ್ಸ್ಪೆಕ್ಟರ್, 43 ಪಿಎಸ್ಐ, 89 ಎಎಸ್ಐ, 4 ಕೆಎಸ್ಆರ್ಪಿ,3 ಕ್ಯೂಆರ್ ಡಿ, 4 ಡಿಆರ್ ಸೇರಿದಂತೆ ಒಟ್ಟು 550 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮೂರು ಡ್ರೋನ್ ಕ್ಯಾಮೆರಾ ಗಳು ಹಾರಾಡುತ್ತವೆ. ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಮಾಡಲಾಗಿದೆ ಎಂದು ನಂಜನಗೂಡಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.