ಹಾಸನ : ಗಣರಾಜ್ಯೋತ್ಸವ ದಿನದಂದು ಡಾ. ಬಿ. ಆರ್ ಅಂಬೇಡ್ಕರ್ ಗೆ ಅಪಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಪಾಟೀಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಫೆ.19 ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಧರ ಕಲಿವೀರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನ ಇಡೀ ದೇಶಕ್ಕೆ ಮಾಡಿದ ಅಪಮಾನವಾಗಿದ್ದು, ಕೂಡಲೇ ಆತನ ವಿರುದ್ದ ಪ.ಜಾತಿ, ಪ.ಪಂಗಡ ದೌರ್ಜನ್ಯ ತಡೆ ಕಾಯಿದೆ ಅಡಿಯಲ್ಲಿ ಬಂಧಿಸಿ ಜೈಲು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ಅನೇಕ ದಿನಗಳಿಂದ ರಾಜ್ಯದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ನಡೆ ಖಂಡನೀಯ, ಈ ವಿಚಾರದಲ್ಲಿ ಜಾತ್ಯತೀತವಾಗಿ ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗ ಗಳು ಕಾರ್ಯ ನಿರ್ವಹಿಸಬೇಕಾದ ಅಗತ್ಯವಿದೆ ಎಂದರು. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗಳ ನ್ಯಾಯಾಧೀಶರಲ್ಲಿ ಪ.ಜಾತಿ ಹಾಗೂ ಪ.ಪಂಗಡದ ನ್ಯಾಯಾಧೀಶರು ಇಲ್ಲದಿರುವುದೇ ಇಂತಹ ಸಮಸ್ಯೆಗಳಿಗೆ ಕಾರಣ, ನ್ಯಾಯಾಧೀಶರ ನೇಮಕಾತಿಯಲ್ಲಿ ಪರಿಶಿಷ್ಟರು ಹಾಗೂ ಹಿಂದುಳಿದ ಜಾತಿಯವರಿಗೆ ಮೀಸಲಾಗಿ ಕಾನೂನು ಜಾರಿಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಕೆ. ಈರಪ್ಪ, ನಾರಾಯಣ ದಾಸ್, ಅಂಬುಗ ಮಲ್ಲೇಶ್, ಸಂದೇಶ್, ಜಗದೀಶ್ ಚೌಡಳ್ಳಿ, ಶಂಕರ್ ರಾಜ್, ನಾಗರಾಜ್ ಹೆತ್ತೂರು, ವೆಂಕಟೇಶ್ ಬ್ಯಾಕರವಳ್ಳಿ, ಜಿ.ಓ. ಮಹಾಂತಪ್ಪ ಇತರರು ಉಪಸ್ಥಿತರಿದ್ದರು.