ಆಲೂರು: ಶಾಲಾ ಸೇತು ಬಂಧ ಯೋಜನೆ ಅಡಿಯಲ್ಲಿ ತಾಲೂಕಿನ 8 ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಲು ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಚ್. ಕೆ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗಟ ಗೆರೆ ಗ್ರಾಮದಲ್ಲಿನ ಕೆರೆಕೋಡಿಗೆ ಸುಮಾರು 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಾಲು ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ಶಾಲಾ ಸೇತುಬಂಧ ಯೋಜನೆ ಅಡಿಯಲ್ಲಿ ಕಾಲು ಸೇತುಬಂಧ ಸೇತುವೆಗಳನ್ನು ನಿರ್ಮಿಸಲಾಗುತ್ತಿದ್ದು ಇದನ್ನು ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ ಅವರು ಕಳೆದ 3 ಅವಧಿಯಲ್ಲಿ ಆಲೂರು ಸಕಲೇಶಪುರ ಕಟ್ಟಾಯ ಕ್ಷೇತ್ರದ ಮತದಾರರು ಬೆಂಬಲಿಸಿ ಶಾಸಕನನ್ನಾಗಿ ಮಾಡಿ ಜನರ ಸೇವೆಗೆ ಸಹಕರಿಸಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಕ್ಷೇತ್ರದ ಜನತೆ ಕೈಹಿಡಿಯುವಂತೆ ಮನವಿ ಮಾಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್ ಮಂಜೇಗೌಡ ಮಾತನಾಡಿ ಕಳೆದ 20 ವರ್ಷಗಳಿಂದಲೂ ಈ ಭಾಗದ ಜನರು ಕಾಲು ಸೇತುವೆಗಾಗಿ ಬೇಡಿಕೆಯನ್ನು ಇಟ್ಟಿದ್ದರು. ಅದನ್ನು ಮನಗಂಡು ಶಾಸಕರು ಈ ಗ್ರಾಮಕ್ಕೆ ಕಾಲು ಸೇತುವೆಯನ್ನು ನಿರ್ಮಿಸುತ್ತಿರುವುದಾಗಿ ತಿಳಿಸಿದ ಅವರು ತಾಲೂಕಿನ ಅಭಿವೃದ್ಧಿಗೆ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಅನೇಕ ಯೋಜನೆ ಹಾಗೂ ಅನುದಾನಗಳನ್ನು ನೀಡಿದೆ, ಅದೇ ರೀತಿ ಶಾಸಕ ಎಚ್ ಕೆ ಕುಮಾರಸ್ವಾಮಿ ಅವರು ತಮ್ಮ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಮುಂಬರುವ ದಿನಗಳಲ್ಲಿ ಶಾಸಕರನ್ನು ಇನ್ನೊಂದು ಅವಧಿಗೆ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಶಾಸಕ ಎಚ್ ಕೆ ಕುಮಾರಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ ಎಸ್ ಮಂಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ ವಿ ಲಿಂಗರಾಜು, ಹಾಲು ಹಾಸನ ಒಕ್ಕೂಟ ನಿರ್ದೇಶಕ ಪಿ ಎಲ್ ನಿಂಗರಾಜು, ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಯಾಣ್ ಕುಮಾರ್, ಮಾಜಿ ಅಧ್ಯಕ್ಷ ಪ್ರಕಾಶ್ ಸೇರಿದಂತೆ ಗ್ರಾಮಸ್ಥರು ಇದ್ದರು.