ಹಾಸನ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಯಿಂದ ಹೊರಟ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಅಶ್ವತ್ಥನಾರಾಯಣ ಹಾಗೂ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು ಹೊಡಿ, ಬಡಿ ಎಂಬುದು ಬಿಜೆಪಿ ಸಂಸ್ಕೃತಿಯಾಗಿದ್ದು ಸಚಿವ ಅಶ್ವತ್ಥ ನಾರಾಯಣ್ ಅವರನ್ನು ಸಂಪುಟದಿಂದ ತಕ್ಷಣವೇ ವಜಾ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿ ದರು. ಸಿದ್ದರಾಮಯ್ಯ ಸರ್ವ ಜನಾಂಗದ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ.
ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದಲ್ಲದೆ, ದುರಹಂಕಾರಿ ಹೇಳಿಕೆ ನೀಡಿದ್ದಾರೆ ಆದ್ದರಿಂದ ಬಿಜೆಪಿ ಸರ್ಕಾರ ಅಶ್ಚತ್ಥನಾರಾಯಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ರಾಮಚಂದ್ರ, ದೇವಪ್ಪ ಮಲ್ಲಿಗೆವಾಳು, ಕೀರ್ತಿಕುಮಾರ್, ಶ್ರೇಯಸ್ ಪಟೇಲ್, ವೆಂಕಟೇಶ್ ಸೇರಿದಂತೆ ಇತರರು ಇದ್ದರು.