ಹಾಸನ: ಉದ್ದೇಶಪೂರ್ವಕವಾಗಿ ರಾಜಕೀಯ ದ್ವೇಷದಿಂದ ಎಫ್ ಸಿ ಐ ನವರಿಗೆ ಅಕ್ಕಿ ಮಾರಾಟ ಮಾಡದಂತೆ ತಡೆಯೊಡ್ಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಜೂನ್ ೨೦ರಂದು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಭಟನೆ ಬೆಳಗ್ಗೆ ೧೧ ಗಂಟೆಗೆ ಆರಂಭವಾಗಲಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿ ಮೂಲಕ ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು . ಈ ವೇಳೆ ಕಾಂಗ್ರೆಸ್ ಪಕ್ಷದ ಮಾಜಿ ,ಹಾಲಿ ಶಾಸಕರು ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು , ಘಟಕಗಳ ಅಧ್ಯಕ್ಷರು ಮತ್ತು ಪ್ರಾಧಿಕಾರಗಳ ಮಾಜಿ ಅಧ್ಯಕ್ಷರು ಸೇರಿದಂತೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ಮಾಡಲಾಗಿದೆ. ಚುನಾವಣೆಯ ಪೂರ್ವ ನೀಡಿದಂತಹ ಐದು ಗ್ಯಾರಂಟಿಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಕ್ರಮ ಕೈಗೊಳ್ಳುತ್ತಿದ್ದು ಶಕ್ತಿ ಯೋಜನೆಯನ್ನು ಈಗಾಗಲೇ ರಾಜ್ಯದ್ಯಂತ ಜಾರಿ ಮಾಡಲಾಗಿದೆ. ಅದೇ ರೀತಿ ಉಚಿತ ವಿದ್ಯುತ್ ಸೌಲಭ್ಯವನ್ನು ಸಹ ನೀಡಲಾಗುವುದು, ಅಲ್ಲದೆ ೧೦ ಕೆಜಿ ಅಕ್ಕಿಯನ್ನು ಕೊಡುವುದಾಗಿ ನೀಡಿದ್ದ ಭರವಸೆಯಂತೆ ಈಗಾಗಲೇ ಹಲವು ಪ್ರಯತ್ನ ಮಾಡುವ ಮೂಲಕ ಯೋಜನೆಯನ್ನು ಜಾರಿಗೆ ತರಲು ತಯಾರಿಗಳು ನಡೆಯುತ್ತಿದೆ.
ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿಯನ್ನು ಸರಬರಾಜು ಮಾಡಲು ಆಗುವುದಿಲ್ಲ ಎಂದು ತಿಳಿಸಿರುವುದು ದ್ವೇಶದ ರಾಜಕೀಯದಿಂದ ಕೂಡಿದ್ದು ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ ಎನ್ ರಾಜಣ್ಣ ಅವರನ್ನು ನೇಮಿಸಲಾಗಿದ್ದು ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಈಗಾಗಲೇ ಎರಡು ಬಾರಿ ಜೆಲ್ಲೆಗೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಗಮನ ನೀಡುತ್ತಿದ್ದಾರೆ ಈಗಾಗಲೇ ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಟ್ಟಿಯನ್ನು ಉಸ್ತುವಾರಿ ಸಚಿವರಿಗೆ ನೀಡಿದ್ದು, ನಗರದಲ್ಲಿನ ರೈಲ್ವೆ ಮೇಲ್ ಸೇತುವೆ, ಅಮೃತ್ ಯೋಜನೆ ಸಮರ್ಪಕ ಅನುಷ್ಠಾನ, ೨೫ ಗ್ರಾಮಗಳನ್ನು ನಗರಸಭೆಗೆ ಸೇರಿಸಿರುವ ನಂತರ ಉದ್ಭವಿಸಿರುವ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ವಿಚಾರ ಸೇರಿದಂತೆ ಹಲವು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದೇವಪ್ಪ, ಮುನಿಸ್ವಾಮಿ, ಶಿವಕುಮಾರ್, ವಿನಯ್ ಗಾಂಧಿ ಇದ್ದರು.