ಹಾಸನ: ಅ.20ರ ಗುರುವಾರ ಶ್ರೀ ಹಾಸನಾಂಬೆಯ ದರ್ಶನಕ್ಕೆ ಸೂಕ್ತ ವ್ಯವಸ್ಥೆಯಾಗದ ಕಾರಣ ಭಕ್ತರು ಸಾಕಷ್ಟು ಸಂಕಷ್ಟಗಳನ್ನು ಎದುರಿಸಬೇಕಾಯಿತು. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತನೊಬ್ಬ ದೇವಾಲಯದ ಮುಂದೆ ಕುಸಿದು ಬಿದ್ದು ಸಾವನ್ನಪ್ಪಿದನು.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸರತಿ ಸಾಲಿನಲ್ಲಿ ನಿಂತಿದ್ದ ಹಾಸನ ತಾಲೂಕಿನ ದುದ್ದ ಹೋಬಳಿಯ ಬೊಮ್ಮೇನಹಳ್ಳಿ ನಿವಾಸಿ ಗಿರೀಶ್ (40) ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಉಪಾಹಾರವನ್ನು ಸಹ ಸೇವಿಸದೆ ದೇವರ ದರ್ಶನಕ್ಕಾಗಿ ಕಾಯುತ್ತಿದ್ದರು ಎಂದು ವರದಿಯಾಗಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಅವರ ಮಗಳು ಶೈಲಜಾ ಅವರು ಗುರುವಾರ ದೇವರ ದರ್ಶನ ಪಡೆದರು. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗುರುವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.