ಹಾಸನ: ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ವಿಜಯಲಕ್ಷ್ಮಿದೇವಿ ಅಭಿಪ್ರಾಯಪಟ್ಟರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಅನಿಯಮಿತ ಕಾನೂನು ಅರಿವು ಮೂಡಿಸುವ ಮೂಲಕ ‘ನಾಗರಿಕ ಸಬಲೀಕರಣ’ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೈನಂದಿನ ಜೀವನಕ್ಕೆ ಅನ್ವಯವಾಗುವ ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮಾತನಾಡಿ, ಕಾನೂನು ಅರಿವು ಕಾರ್ಯಕ್ರಮವು ಪ್ರತಿಯೊಬ್ಬ ನಾಗರಿಕನಿಗೂ ಪ್ರಯೋಜನಕಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.