ಹಾಸನ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ ಸೆಣಸಲು ರೂಪುಗೊಂಡಿರುವ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾಕ್ಕೆ ಯಶಸ್ಸು ದೊರೆಯುವುದು ಕಷ್ಟ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಭಾನುವಾರ ಹಾಸನದಲ್ಲಿ ಮಾತನಾಡಿದ ಅವರು ಇಂಡಿಯಾ ಈಗಾಗಲೇ 3 ಸಮನ್ವಯ ಸಮಿತಿಗಳನ್ನು ರಚಿಸಿದ್ದು, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆಯೂ ತೀರ್ಮಾನ ಮಾಡಿದ್ದಾರೆ. ಆದರೆ ಇದುವರೆಗೂ ಪ್ರಧಾನಿ ಅಭ್ಯರ್ಥಿ ತೀರ್ಮಾನ ಮಾಡಲು ಸಾಧ್ಯವಾಗಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಿ ಇಂಡಿಯಾ ನಿಲ್ಲುವುದು ಅಸಾಧ್ಯ ಎಂದು ಹೇಳಲಾರೆ. ಆದರೆ ಕಷ್ಟವಿದೆ ಎಂದರು.
ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಬಿಜೆಪಿಗೆ ಇದುವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಆ ಪಕ್ಷಕ್ಕೆ ರಾಜ್ಯಾಧ್ಯಕ್ಷ ಯಾರೆಂಬುದೇ ಗೊತ್ತಿಲ್ಲ. ಬಿಜೆಪಿಯಲ್ಲಿಯೇ ಈಗ ಒಗ್ಗಟ್ಟಿಲ್ಲದ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಜೆಡಿಎಸ್ ನೊಂದಿಗೆ ಹೇಗೆ ಹೊಂದಾಣಿಕೆ ಸಾಧ್ಯ ಎಂದು ಪ್ರಶ್ನಿಸಿದರು.