ಹಾಸನ: ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ, ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೋನಿಯಾಗಾಂಧಿ ಅವರು ಯುಪಿಎ ಅಧ್ಯಕ್ಷರಾಗಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ತಮ್ಮ ಹಿಡಿತದಲ್ಲಟ್ಟುಕೊಂಡು ಕೆಲಸ ಮಾಡಿದರು. ಆ ಸಂದರ್ಭದಲ್ಲಿ ಸಾಕಷ್ಟು ಹಗರಣಗಳು ನಡೆದು ಸರ್ಕಾರ ಬಿದ್ದು ಹೋಯಿತು. ಸೋನಿಯಾಗಾಂಧಿಯವರಿಗೆ ಇಂದು ಲೋಕಸಭೆ ಚುನಾವಣೆಗೆ ನಿಲ್ಲುವ ಶಕ್ತಿ ಇಲ್ಲದೆ ರಾಜಸ್ತಾನದಲ್ಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ.
ದೇಶವನ್ನಾಳಿದ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದಲ್ಲಿಂದು ಕಾಂಗ್ರೆಸ್ ಇಲ್ಲವಾಗಿದೆ. ದೇಶದಲ್ಲಿ ಕರ್ನಾಟಕ, ಹಿಮಾಚಲಪ್ರದೇಶ, ತೇಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಕಾಂಗ್ರೆಸ್ ದಿನೇ ದಿನೇ ಕ್ಷಿಣಿಸುತ್ತಿದೆ. ಐ ಎನ್ ಡಿಐಎ ಒಕ್ಕೂಟದಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾವ ನಾಯಕರುಗಳಿಗೂ ಇಲ್ಲ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಲು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.
ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಜೆಡಿಎಸ್ ಜನತಾ ಪರಿವಾರದಿಂದ ಬಂದಿರುವುದರಿಂದ ಇದು ಪವಿತ್ರ ಮೈತ್ರಿಯಾಗಿದೆ. ರಾಜ್ಯಸರ್ಕಾರ ಕೇವಲ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾ ಜನರ ದಾರಿತಪ್ಪಿಸುತ್ತಿದೆ. ಕಾಂಗ್ರೆಸ್ ಪಕ್ಷ ದಲಿತ ವಿರೋಧಿ ಪಕ್ಷ ಆದರೆ ದಲಿತರಿಗೆ ಇದು ಅರ್ಥವಾಗುತ್ತಿಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂಬುದನ್ನು ದಲಿತರು ತಿಳಿದುಕೊಳ್ಳಬೇಕಿದೆ ಎಂದರು.
ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಎರಡು ಸಾವಿರ ನೀಡುತ್ತೇವೆ ಎಂಬ ಗ್ಯಾರಂಟಿ ನೀಡಿ, ಒಬ್ಬರಿಗೆ ಹಣ ಕೊಟ್ಟರೆ, ಇನ್ನೊಬ್ಬರಿಗೆ ಕೊಟ್ಟಿಲ್ಲ, ಲೋಕಸಭಾ ಚುನಾವಣೆಗಾಗಿ ಈ ತಿಂಗಳು ಹಣ ಸಂದಾಯ ಮಾಡಿದ್ದಾರೆ. ಹಣವನ್ನು ಅವರ ಮನೆಯಿಂದ ತಂದು ಕೊಡುತ್ತಿಲ್ಲ. ನಿಮ್ಮ ಗಂಡಂದಿರ ಜೇಬಿನಿಂದ ಕಿತ್ತು ನಿಮಗೆ ಕೊಡುತ್ತಿದ್ದಾರೆ ಇವರಿಗೆ ಮತ ಕೇಳಲು ನೈತಿಕತೆ ಇಲ್ಲ ಎಂದರು.
ಶಾಸಕ ಎಚ್.ಕೆ.ಸುರೇಶ್, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಸ್.ಲಿಂಗೇಶ್, ರಾಷ್ಟ್ರೀಯ ತೆಂಗು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಬೆಣ್ಣೂರು ರೇಣುಕುಮಾರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ತೋ.ಚ. ಅನಂತ ಸುಬ್ಬರಾಯ, ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಹೇಶ್, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಅಡಗೂರು ಆನಂದ್. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ .ನಾಗರಾಜ್. ಜೆಡಿಎಸ್ ಯುವ ಘಟಕದ ಅಧ್ಯಕ್ಷ ಬಿ.ಸಿ. ಉಮೇಶ್ ಇತರರು ಇದ್ದರು.