ಹಾಸನ: ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನನ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸಿದ ವೇಳೆ ಲಘು ಲಾಠಿ ಪ್ರಹಾರ ನಡೆದಿದೆ.
ಹಾಸನ ಜಿಲ್ಲೆ, ಸಕಲೇಶಪುರ ತಾ| ಯಸಳೂರು, ಬಾಳೆಕೆರೆ ಅರಣ್ಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ವೀರಮರಣವನ್ನಪ್ಪಿತು. ಅರ್ಜುನನ ಕಳೇಬರವನ್ನು ಮೈಸೂರಿಗೆ ಕರೆತರುವಂತೆ ಕೆಲ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದರು. ಆದ್ರೆ ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಮುಂದಾದರು.
ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಿ ಸ್ಮಾರಕ ಮಾಡಲು ಆಗ್ರಹಿಸಿದ್ದರು. ಇದಕ್ಕೆ ಒಪ್ಪದ ಅರಣ್ಯ ಅಧಿಕಾರಿಗಳು, ಮೃತಪಟ್ಟ ಸ್ಥಳವಾದ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿಯೇ ಅಂತ್ಯಕ್ರಿಯೆ ನಡೆಸಲು ಜೆಸಿಬಿ ಮೂಲಕ ಗುಂಡಿ ತೆಗೆಸುತ್ತಿದ್ದಾರೆ.
ಅರ್ಜುನನ ಅಂತ್ಯ ಸಂಸ್ಕಾರಕ್ಕೆ ಗುಂಡಿ ತೆಗೆಯುತ್ತಿದ್ದ ವೇಳೆ ಕೆಲ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದರು. ಇದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಪೊಲೀಸರು ಲಾಠಿ ಚಾರ್ಜ್ಗೆ ಮುಂದಾಗುತ್ತಿದ್ದಂತೆ ಸ್ಥಳದಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿದರು. ಓಡುವ ಬರದಲ್ಲಿ ಕೆಲವರು ಬಿದ್ದು ಕೈಕಾಲಿಗೆ ಪೆಟ್ಟಾಗಿಸಿಕೊಂಡಿದ್ದಾರೆ.
ವೀರಮರಣವನ್ನಪ್ಪಿದ ಕ್ಯಾಪ್ಟನ್ ಅರ್ಜುನ ಅಂತ್ಯಕ್ರಿಯೆಗೂ ಮುನ್ನ ಮೂರು ಸುತ್ತು ಕುಶಾಲತೋಪು ಹಾರಿಸಿ, ಸಕಲ ಪೊಲೀಸ್ ಗೌರವವನ್ನೂ ಸಲ್ಲಿಸಲಾಯಿತು. ರಾಜಮನೆತನದ ಪುರೋಹಿತ ಪ್ರಹ್ಲಾದ್ ತಂಡದಿಂದ ಪೂಜಾ ವಿಧಿವಿಧಾನ ನೇರವೇರಿಸಲಾಯಿತು.