ಹಾಸನ: ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಸದರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಅವರ ಕೈ ಭದ್ರಪಡಿಸುವುದರೊಂದಿಗೆ ಪೂರ್ಣಾವಧಿವರೆಗೆ ಅವರೇ ಸಿಎಂ ಆಗಿರುತ್ತಾರೆ ಎಂದು ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದ ಹೊಳೆನರಸೀಪುರ ತಾಲ್ಲೂಕಿನ, ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮೊದಲು ಐದು ಗ್ಯಾರೆಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅಧಿಕಾರಕ್ಕೆ ಬಂದು ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ ಆ ಮೂಲಕ ಮತ್ತೊಮ್ಮೆ ನುಡಿದಂತೆ ನಡೆಯುವದಾಗಿ ಸಾಬೀತು ಮಾಡಿದ್ದಾರೆ ಎಂದು ಹೇಳಿದರು.
ಬಡವರಿಗಾಗಿ, ಶೋಷಿತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ಗೆ ಇದೆ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆಧ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದು ತಿಳಿಸಿದರು.
ಗ್ಯಾರೆಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಹೆಚ್ಚು ಸ್ಥಾನ ಗೆದ್ದರೆ ನಮಗೆ ಬಲ ಬರುತ್ತದೆ ಇದನ್ನು ಲೋಕಸಭಾ ಚುನಾವಣೆಯಲ್ಲಿ ಮತದಾರರು ತೋರಿಸಬೇಕು ಎಂದು ಕರೆ ನೀಡಿದರು.