ಮೈಸೂರು: ಮೈಸೂರಿನ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿ ಎಡಭಾಗದಲ್ಲಿ ಇರುವ ಉದ್ಯಾನವನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರುವುದು ಅಕ್ಷಮ್ಯ ಅಪರಾಧ ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ ಹೇಳಿದೆ.
ಸಂಘಟನೆಗೆ ಸಾರ್ವಜನಿಕರು ಸಮಸ್ಯೆಗೆ ಬಗ್ಗೆ ಕರೆ ಮಾಡಿ ತಿಳಿಸಿದ್ದು ಸಂಘಟನೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ನೋಡಿದಾಗ ವಾಹನ ನಿಲುಗಡೆ ಮಾಡಿ ಉದ್ಯಾನವನವನ್ನು ಹಾಳು ಮಾಡಲು ಮುಂದಾಗಿದ್ದಾರೆ. ಅಲ್ಲದೆ ಈ ಬಗ್ಗೆ ಅರಣ್ಯ ಕಚೇರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಈ ವಿಷಯ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ವಿಷಯ ಎಂದು ತಿಳಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಮಾತನಾಡಿ ವಿಷಯ ತಿಳಿಸಿದಾಗ ಅವರು ಪೋಲಿಸ್ ಇಲಾಖೆಗೆ ಹೇಳಿ ಎಂದು ಹೇಳಿದ್ದಾರೆ.
ಸಂಘಟನೆಯವರು ಪಾಲಿಕೆ ಗಮನ ಹರಿಸಬೇಕು ಎಂದು ಹೇಳಿದಾಗ ಆಯುಕ್ತರು ವಾಹನಗಳನ್ನು ತೆರವು ಗೊಳಿಸಲು ತಿಳಿಸುತ್ತೇವೆ ಎಂದು ಹೇಳಿದ್ದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಕರೆ ಮಾಡಿ ಈ ಬಗ್ಗೆ ತಿಳಿಸಿದ್ದೆವು. ಅವರು ಕೂಡ ವಾಹನ ನಿಲುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಧಿಕಾರಿಗಳೇ ಉದ್ಯಾನವನದಲ್ಲಿ ಪಾರ್ಕಿಂಗ್ ಗೆ ಅವಕಾಶ ನೀಡಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ.
ಈ ಬಗ್ಗೆ ಸ್ಥಳದಲ್ಲಿ ಇದ್ದ ಪೋಲಿಸ್ ಅಧಿಕಾರಿಗಳನ್ನು ವಿಚಾರಿಸಿದಾಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಅನುಮತಿ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಹಾಗಾದರೆ ಸಾಮಾನ್ಯ ಜನರು ತಪ್ಪು ಮಾಡಿದರೆ ದಂಡ ವಸೂಲಿ ಮಾಡುವ ಅಧಿಕಾರಿಗಳು ಅಧಿಕಾರಿಗಳೇ ತಪ್ಪು ಮಾಡಿ ಕಾನೂನು ಉಲ್ಲಂಘನೆ ಮಾಡಿದಾಗ ಇವರಿಗೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸವುದು ಯಾರು? ಎಂದು ಸಂಘಟನೆ ಪ್ರಶ್ನೆ ಮಾಡಿದೆ. ಅಲ್ಲದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗದ ಸಂಸ್ಥಾಪಕ ಅಧ್ಯಕ್ಷರು ಡಿಪಿಕೆ ಪರಮೇಶ್ ಆಗ್ರಹಿಸಿದ್ದಾರೆ.