ನಂಜನಗೂಡು: ಈ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಖಡಕ್ ಸೂಚನೆ ನೀಡಿದ್ದಾರೆ.ಇದು ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ತವರು ಜಿಲ್ಲೆ, ಸಂಸದ ಸುನೀಲ್ ಬೋಸ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ಪ್ರತಿನಿಧಿಸುವ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಡವಾಡಿ ಗ್ರಾಮದಲ್ಲಿ ಗ್ರಾಮಸ್ಥರು ಇನ್ನು ಕೂಡ ವಿದ್ಯುತ್ ದೀಪವನ್ನೇ ಕಂಡಿಲ್ಲ.
ಗ್ರಾಮದ ಜನತಾ ಕಾಲೋನಿಯಲ್ಲಿ ವಾಸಿಸುವ ಸುಮಾರು 40 ಕ್ಕೂ ಹೆಚ್ಚು ಮನೆಗಳಿಗೆ ಕಳೆದ 15 ವರ್ಷಗಳಿಂದ ವಿದ್ಯುತ್ ಸಂಪರ್ಕವಿಲ್ಲದೆ ಮೇಣದ ಬತ್ತಿಯ ಬೆಳಕಿನಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡಿ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿ ಎಂದು ನಿಮ್ಮ ನ್ಯೂಸ್ ಕರ್ನಾಟಕ ಸುದ್ದಿ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.
ನಂಜನಗೂಡು ನಗರದಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್ ರವರು, ನನಗೂ ಕೂಡ ಈ ಸಮಸ್ಯೆಯನ್ನು ಕೇಳಿ ಆಶ್ಚರ್ಯವಾಗಿದೆ. 2024ಕ್ಕೆ ಬಂದಿದ್ದೇವೆ ಇನ್ನು ಕೂಡ ಮನೆಗಳಿಗೆ ವಿದ್ಯುತ್ ದೀಪ ಇಲ್ಲ ಎಂದರೆ ಬೇಸರವಾಗುತ್ತದೆ. ಈಗಾಗಲೇ ಸಂಬಂಧಪಟ್ಟ ಚೆಸ್ಕಾಂ ಎಇಇ ಅವರಿಗೆ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕೂಡಲೇ ವಿದ್ಯುತ್ ಸಂಪರ್ಕವನ್ನು ನೀಡಬೇಕು ಎಂದು ತಾಕೀತು ಮಾಡಿದ್ದೇನೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅವರಿಗೆ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.