ನಂಜನಗೂಡು: ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಉಪೇಂದ್ರ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ಭೀಮ್ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಕರ್ನಾಟಕ ಭೀಮ್ ಸೇನೆ ಪದಾಧಿಕಾರಿಗಳು ನಟ ಉಪೇಂದ್ರ ಮತ್ತು ಅರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಬೇಕು ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಕರ್ನಾಟಕ ಭೀಮ್ ಸೇನೆಯ ತಾಲ್ಲೂಕು ಅಧ್ಯಕ್ಷ ಬಾಣೂರು ಶಿವಸ್ವಾಮಿ ಮಾತನಾಡಿ, ದಲಿತ ಹಿರಿಯ ಮುಖಂಡ ಹಾಗೂ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಬೇಕು. ಹಾಗೂ ನಟ ಉಪೇಂದ್ರ ಅವರು ಮಾತನಾಡುವ ವೇಳೆ ಊರಿದ್ದ ಕಡೆ ಹೊಲಗೇರಿ ಎಂದು ಹೇಳಿ ದಲಿತರಿಗೆ ಅಪಮಾನ ಮಾಡಿದ್ದಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಈಗಾಗಲೇ ನಟ ಉಪೇಂದ್ರ ಅವರ ಮೇಲೆ ಕೇಸ್ ದಾಖಲು ಮಾಡಲಾಗಿದೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಕೂಡಲೇ ನಟ ಉಪೇಂದ್ರ ಅವರನ್ನು ಬಂಧಿಸಬೇಕು. ಅವರು ನಟಿಸಿರುವ ಚಿತ್ರಗಳನ್ನು ನಿಷೇಧ ಮಾಡಬೇಕು. ಒಂದು ವೇಳೆ ಉಪೇಂದ್ರ ಅವರನ್ನು ಬಂಧಿಸದೇ ಇದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ದಲಿತ ರಾಮಯ್ಯ ಎಂದು ಕರೆಯುತ್ತಾರೆ ನಿಮಗೆ ಅಷ್ಟೊಂದು ದಲಿತರ ಮೇಲೆ ಕಾಳಜಿ ಇದ್ದರೆ ಕೂಡಲೇ ಮಾಜಿ ಸಚಿವ ಅರಗ ಜ್ಞಾನೇಂದ್ರ ಮತ್ತು ನಟ ಉಪೇಂದ್ರ ಅವರನ್ನು ಬಂಧಿಸಿ ಆಗ ನಾವು, ನೀವು ದಲಿತ ಪರ ಎಂದು ಒಪ್ಪಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಭೀಮ್ ಸೇನೆಯ ಜಿಲ್ಲಾಧ್ಯಕ್ಷ ಗಟ್ಟವಾಡಿ ಸ್ವಾಮಿ, ಗೌರವಾಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷ ಪ್ರಕಾಶ್, ಕಾರ್ಯಾಧ್ಯಕ್ಷ ನಾಗರಾಜು, ಪ್ರಧಾನ ಕಾರ್ಯದರ್ಶಿ ಕುಮಾರ್, ಗಟ್ಟವಾಡಿ ಸಿದ್ದರಾಜು, ಶಿವರಾಜು, ಆನಂದ್ ಸೇರಿದಂತೆ ಹಲವರು ಭಾಗವಹಿಸಿದ್ದರು.