ಮಡಿಕೇರಿ : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಸರಾ ಆಚರಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕೋವಿಡ್ ಪ್ರಕರಣಗಳು ಹೆಚ್ಚಿರುವುದರಿಂದ ಕಳೆದ ಬಾರಿಯಂತೆ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕವಾಗಿ ದಸರಾ ಆಚರಣೆಗೆ ಜಿಲ್ಲಾಡಳಿತದ ಜತೆ ಎಲ್ಲರೂ ಸಹಕರಿಸಬೇಕೆಂದು ಕೋರಿದರು.
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕಳೆದ ಬಾರಿ ಯಾವ ರೀತಿ ದಸರಾ ಆರಚಣೆಗೆ ಕ್ರಮ ವಹಿಸಲಾಗಿತ್ತೋ ಅದನ್ನು ಮುಂದುವರಿಸಬೇಕು. ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಆದೇಶ ಮತ್ತು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂಬಂಧ ಮತ್ತೊಂದು ಬಾರಿ ಸಭೆ ಸೇರಿ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಕ್ಟೋಬರ್ 7ರಿಂದ ಕರಗ: ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ ಅವರು ಮಾತನಾಡಿ ಕೋವಿಡ್ ಪೂರ್ವದಲ್ಲಿ ಮಡಿಕೇರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು, ಆದರೆ ಕೋವಿಡ್ ನಂತರ ಕಳೆದ ಬಾರಿ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.
ಶಕ್ತಿ ದೇವತೆಗಳ ಕರಗ ಉತ್ಸವವು ಅಕ್ಟೋಬರ್ 7 ರಂದು ಪಂಪಿನಕೆರೆಯಿಂದ ಆರಂಭಗೊಳ್ಳಲಿದೆ, ಪೂಜಾ ವಿಧಿವಿಧಾನಗಳು ಎಂದಿನಂತೆ ನಡೆಯಲಿವೆ ಎಂದು ಹೇಳಿದರು. ಮುಖ್ಯಮಂತ್ರಿ ಬಳಿಗೆ ನಿಯೋಗ: ಮಡಿಕೇರಿ ದಸರಾಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲಾಗುವುದು ಎಂದು ರಾಬಿನ್ ದೇವಯ್ಯ ಅವರು ತಿಳಿಸಿದರು.
ಕಳೆದ ಬಾರಿ ಕರಗ ಉತ್ಸವ ಚಾಲನಾ ಸಂದರ್ಭದಲ್ಲಿ 100 ಜನ ಭಾಗವಹಿಸಿದ್ದರು ಎಂದು ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರು ಮಾಹಿತಿ ನೀಡಿದರು. ದಶಮಂಟಪ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರು ಕಳೆದ ಬಾರಿ ಸರಳವಾಗಿ ದಸರಾ ಆಚರಿಸಲಾಯಿತು. ವ್ಯಾಪಾರ ವಹಿವಾಟಿಗೆ ಉತ್ತೇಜನ ನೀಡುವಲ್ಲಿ ಈ ಬಾರಿ ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು.
ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಅವರು ಮಾತನಾಡಿ, ಕಳೆದ ವರ್ಷದಂತೆ ಈ ಬಾರಿ ದಸರಾ ಆಚರಿಸಿದರೆ ಆಕರ್ಷಣಿಯವಾಗಿರುವುದಿಲ್ಲ. ಆದ್ದರಿಂದ ಮಡಿಕೇರಿ ನಗರದಲ್ಲಿ ಬೆಳಕಿನ ವ್ಯವಸ್ಥೆ ಹಾಗೂ ಅಲಂಕಾರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಪೌರಾಯುಕ್ತ ಎಸ್.ವಿ.ರಾಮದಾಸ್ ಅವರು ಮಡಿಕೇರಿ ದಸರಾ ಆಚರಣೆ ಹಾಗೂ ಬೈಲಾ ಬಗ್ಗೆ ಮಾಹಿತಿ ನೀಡಿದರು. ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ ಜಪ್ಪು ಸುಬ್ಬಯ್ಯ ಅವರು ಮಾತನಾಡಿ, ಗೋಣಿಕೊಪ್ಪದಲ್ಲಿ 10 ದಿನಗಳ ಕಾಲ ಚಾಮುಂಡೇಶ್ವರಿ ಪೂಜೆ ಮಾಡಿ ದಸರಾ ಆಚರಿಸಲಾಗುತ್ತದೆ. ಸರ್ಕಾರದ ನಿಯಮದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ.ದರ್ಶನಾ ಅವರು ಕಳೆದ ಬಾರಿಯ ಸಭೆಯ ನಡವಳಿಯ ಬಗ್ಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿವೈಎಸ್ಪಿ ಗಜೇಂದ್ರ ಪ್ರಸಾದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜು, ಪ್ರಮುಖರಾದ ಸೂರ್ತಲೆ ಸೋಮಣ್ಣ, ಗೋಣಿಕೊಪ್ಪ ದಸರಾ ಸಮಿತಿಯ ಅಧ್ಯಕ್ಷ ರಾಮಕೃಷ್ಣ, ಪಿಡಿಒ ತಿಮ್ಮಯ್ಯ ಇತರರು ಇದ್ದರು.