ಮಡಿಕೇರಿ : ಕೊಡವ ಸಮುದಾಯ ಮತ್ತು ಕೊಡಗಿನ ಜಮ್ಮಾ ಹಿಡುವಳಿದಾರರು ಬಂದೂಕು ವಿನಾಯಿತಿ ಹಕ್ಕು ಹೊಂದುವ ಕುರಿತು ಹೈ ಕೋರ್ಟಿನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಮಂಗಳವಾರ ವಿಚಾರಣೆ ನಡೆಸಲಾಯಿತು.
ಹೈ ಕೋರ್ಟ್ ಹಿರಿಯ ನ್ಯಾಯಾಧೀಶರುಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಸಚಿನ್ ಮಗ್ಗುಂ ಅವರ ವಿಭಾಗೀಯ ಪೀಠ ಎದುರು ಬಂದ ಅರ್ಜಿಯನ್ನು ಪರಿಶೀಲನೆ ನಡೆಸಿದ ನ್ಯಾಯಾಲಯ ಈ ವಿಚಾರಣೆಯಲ್ಲಿ ಫೆಡರೇಷನ್ ಆಫ್ ಕೊಡವ ಸಮಾಜ(ಬಾಳುಗೋಡು), ಕೊಡವ ನ್ಯಾಷನಲ್ ಕೌನ್ಸಿಲ್ ಮತ್ತು ಕೊಡವ ಸಮಾಜ ಬೆಂಗಳೂರು ದಾಖಲಿಸಿದ ಅರ್ಜಿಗಳನ್ನು ಪುರಸ್ಕರಿಸಿ ಇವರುಗಳನ್ನೂ ಕೂಡ ಪ್ರತಿವಾದಿಗಳನ್ನಾಗಿ ಪರಿಗಣಿಸಲು ನ್ಯಾಯಾಲಯ ಆದೇಶ ಮಾಡಿದೆ.
ಮಾತ್ರವಲ್ಲದೇ ಬಂದೂಕು ವಿಚಾರದ ಕುರಿತು ಈ ಸಂಸ್ಥೆಗಳಿಗೆ ಏನೇ ಆಕ್ಷೇಪಣೆಗಳು ಇದ್ದರೂ ಅದನ್ನು ಲಿಖಿತ ರೂಪದಲ್ಲಿ ಸಲ್ಲಿಸಲು ಎರಡು ವಾರಗಳ ಕಾಲಾವಕಾಶವನ್ನು ನ್ಯಾಯಾಲಯ ನೀಡಿದೆ. ಅದೇ ರೀತಿಯಲ್ಲಿ ಕೇಂದ್ರ ಸರ್ಕಾರಕ್ಕೂ ಕೂಡ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಎರಡುವಾರಗಳ ಸಮಯ ಕೊಡಲಾಗಿದೆ. ತದನಂತರ ಪ್ರಕರಣದ ವಿಚಾರಣೆಯನ್ನು ಆಗಸ್ಟ್.31ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.
ಈ ರಿಟ್ ಅರ್ಜಿಯ ವಿರುದ್ಧ ಆಕ್ಷೇಪಣೆಗಳನ್ನು ಶೀಘ್ರದಲ್ಲೇ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಫೆಡರೇಷನ್ ಆಫ್ ಕೊಡವ ಸಮಾಜ, ಕೊಡವ ನ್ಯಾಷನಲ್ ಕೌನ್ಸಿಲ್ ಪರ ವಕಾಲತು ವಹಿಸಿದ್ದ ಹಿರಿಯ ವಕೀಲರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಸಮಾಜ ಬೆಂಗಳೂರು ಪರವಾಗಿದ್ದ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಅಡಿಷನಲ್ ಸಾಲಿಸಿಟರ್ ಜನರಲ್ ನರಗುಂದ ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು.
ಕೊಡಗು : ಕೋವಿ ವಿವಾದದ ವಿಚಾರಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.