ಮಡಿಕೇರಿ: ಕೊಡಗು ಜಿಲ್ಲೆಯ ಅಭ್ಯರ್ಥಿಯೊಬ್ಬರಿಗೆ ನಕಲಿ ನೇಮಕಾತಿ ಆದೇಶವನ್ನು ನೀಡುವುದರೊಂದಿಗೆ ಗ್ರಾಮಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ರೂ.1.50 ಲಕ್ಷ ಹಣ ಕೇಳುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಈ ವಿಷಯ ಜಿಲ್ಲಾಡಳಿತದ ಗಮನಕ್ಕೂ ಬಂದಿದ್ದು,ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳನ್ನು ತುಂಬಲು ಪ್ರಸ್ತುತ ಜಿಲ್ಲಾಡಳಿತದಿಂದ ಯಾವುದೇ ಅಧಿಸೂಚನೆ ಹೊರಡಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವುದಿದ್ದಲ್ಲಿ ನಿಯಮಾನುಸಾರ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ವ್ಯಾಪಕ ಪ್ರಚಾರ ನೀಡಿ, ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಆದ್ದರಿಂದ ಈ ರೀತಿಯ ನಕಲಿ ನೇಮಕಾತಿ ಪತ್ರ ನೀಡುವ ಜಾಲಕ್ಕೆ ಸಾರ್ವಜನಿಕರು ಹಣ ನೀಡಿ ಮೋಸ ಹೋಗಬಾರದೆಂದು ಜಿಲ್ಲಾಡಳಿತ ವಿನಂತಿಸಿದೆ.
ಈ ರೀತಿ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿ ಕೊಡುವುದಾಗಿ ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆಹಚ್ಚಿ ನಿಯಮಾನುಸಾರ ಸೂಕ್ತ ಕ್ರಮ ವಹಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಹಾಗೆಯೇ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿ ಕೊಡುವುದಾಗಿ ಯಾವುದೇ ಅನಾಮಧೇಯ ಕರೆಗಳು ಬಂದಲ್ಲಿ ತಕ್ಷಣವೇ ಜಿಲ್ಲಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ (ಸಂ:08272-225500)ಯನ್ನು ಸಂಪರ್ಕಿಸಬಹುದಾಗಿದೆ ಜಿಲ್ಲಾಧಿಕಾರಿ ಹೇಳಿದ್ದಾರೆ.