ಮಡಿಕೇರಿ : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮಕ್ಕೆ ಗೌರವ ನಮನ ಸಲ್ಲಿಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರುವ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಪೊಲೀಸ್ ಬ್ಯಾಂಡ್ ನೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಮೆರವಣಿಗೆಯಲ್ಲಿ ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ, ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.
ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತಲ್ಲದೆ, ಸರ್ವಧರ್ಮ ಪ್ರಾರ್ಥನೆಯೊಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳಿಂದ ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮ ನಡೆಯಿತಲ್ಲದೆ, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು. ಕಾರ್ಯಕ್ರಮದ ಬಳಿಕ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಕೊಂಡೊಯ್ದು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಇರುವುದು ಇಡೀ ರಾಷ್ಟ್ರದಲ್ಲೇ ವಿಶೇಷವಾಗಿದೆ. ಆ ದಿಸೆಯಲ್ಲಿ ನಗರದ ಗಾಂಧೀ ಮಂಟಪದಲ್ಲಿ ಚಿತಾಭಸ್ಮವಿಟ್ಟು ’ರಾಜ್ಘಾಟ್’ ಮಾದರಿಯಲ್ಲಿ ’ಗಾಂಧಿ ಸ್ಮಾರಕ ನಿರ್ಮಾಣ’ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು.
ಈಗಾಗಲೇ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ’ಗಾಂಧಿ ಭವನ’ ನಿರ್ಮಾಣ ಆಗುತ್ತಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಆ ದಿಸೆಯಲ್ಲಿ ಗಾಂಧಿ ಭವನದಲ್ಲಿ ಗಾಂಧೀಜಿ ವಿಚಾರಧಾರೆಗಳ ಕುರಿತು ಕಾರ್ಯಕ್ರಮಗಳು, ಗ್ರಂಥಾಲಯ ಮತ್ತಿತರ ಚಟುವಟಿಕೆಗಳು ಒಳಗೊಂಡಿರುತ್ತದೆ ಎಂದು ತಿಳಿಸಿದರು.
ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಆಯೋಜಿಸಿಕೊಂಡು ಬರಲಾಗಿದೆ. ಆ ನಿಟ್ಟಿನಲ್ಲಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈಗಾಗಲೇ ನೀಲನಕ್ಷೆ ತಯಾರಿಸಲಾಗಿದೆ. ಜಾಗ ಸಂಬಂಧ ಸರ್ವೆ ಕಾರ್ಯ ಆಗಿದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 1 ಕೋಟಿ ರೂ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದ್ದು, ಆ ಸಂದರ್ಭದಲ್ಲಿ 50ಲಕ್ಷ ರೂ ಬಿಡುಗಡೆಗೆ ಆದೇಶ ಮಾಡಿದ್ದರು, ಸದ್ಯ ಗಾಂಧಿ ಮಂಟಪದಲ್ಲಿನ 35 ಸೆಂಟ್ಸ್ ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಸ್ತಾಂತರವಾದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಶಾಸಕರ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಭೇಟಿ, ಮಾಡಿ ಅನುದಾನ ಬಿಡುಗಡೆಗೆ ಕೋರಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು.