ಮಡಿಕೇರಿ: ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಮತ್ತು ದಲಿತ ಜಾಗೃತಿ ಸಮಾವೇಶವನ್ನು ಮೇ 29 ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಉದ್ಘಾಟಿಸಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ, ಪತ್ರಕರ್ತ ರಾ.ಚಿಂತನ್, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿ, ಮೈಸೂರು- ಕೊಡಗು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮೈಸೂರು ಜಿಲ್ಲಾ ಸಂಚಾಲಕ ಮಹದೇವಸ್ವಾಮಿ, ಕಾಂಗ್ರೆಸ್ ಯುವ ಮುಖಂಡ ಡಾ.ಮಂಥರ್ ಗೌಡ, ಜಿ.ಪಂ ಉಪಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ್, ನಗರಸಭಾ ಪೌರಾಯುಕ್ತ ಹೆಚ್.ವಿ.ರಾಮದಾಸ್, ಸ್ತ್ರೀರೋಗ ತಜ್ಞೆ ಸೌಮ್ಯ ಡಿ ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಮಧ್ಯಾಹ್ನ ಬೆಳ್ಳಿ ರಥದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನಿರಿಸಿ ಕಾವೇರಿ ಕಲಾಕ್ಷೇತ್ರದಿಂದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿರುವ ಡಾ.ಅಂಬೇಡ್ಕರ್ ಭವನದವರೆಗೆ ಜಾಗೃತಿ ಜಾಥಾ ನಡೆಯಲಿದ್ದು, ಕಲಾತಂಡಗಳು ಆಕರ್ಷಿಸಲಿವೆ ಎಂದು ದಿವಾಕರ್ ಹೇಳಿದ್ದಾರೆ.