ಕೊಡಗು: ಕಳೆದ ಮೂರು ವರ್ಷಗಳ ಹಿಂದೆ ಸುರಿದ ಮಹಾಮಳೆಗೆ ಕಾವೇರಿ ನದಿ ಉಕ್ಕಿ ಹರಿದು ನದಿ ದಡದಲ್ಲಿ ವಾಸವಾಗಿದ್ದವರ ಮನೆ ಆಸ್ತಿ-ಪಾಸ್ತಿ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಶಾಶ್ವತ ಸೂರು ಹಾಗೂ ಮೂಲಸೌಕರ್ಯ ತಲುಪದೆ ಇಂದಿಗೂ ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ.
ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದ ಕಾಡು, ಬರಡಿ, ಕುಂಬಾರಗುಂಡಿ ಗ್ರಾಮದಲ್ಲಿ ಹಲವು ವರ್ಷಗಳಿಂದ ನದಿ ದಡದಲ್ಲಿ ವಾಸವಾಗಿದ್ದ ನೂರಾರು ಕುಟುಂಬಗಳ ಮನೆಗಳು ನೆಲಸಮಗೊಂಡು, ಹಲವು ಮನೆಗಳು ಹಾನಿಯಾಗಿವೆ.
ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡ ಕುಟುಂಬಗಳು ಪರಿಹಾರ ಕೇಂದ್ರದಲ್ಲಿದ್ದ ಸಂದರ್ಭ ಶಾಶ್ವತ ಸೂರು, ಪರಿಹಾರ, ಬಾಡಿಗೆ ನೀಡುವ ಭರವಸೆ ನೀಡಿದ್ದು, ಇದುವರೆಗೂ ಯಾವುದೂ ಈಡೇರಲಿಲ್ಲ ಎಂದು ನಿವಾಸಿಗಳು ಜಿಲ್ಲಾಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೆಲ್ಯಹುದಿಕೇರಿ ಸೇತುವೆಯಿಂದ ಕುಂಬಾರಗುಂಡಿ ಹೊಳೆಕೆರೆ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರ ಹಾಗೂ ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿಗಳಲ್ಲಿ ಮಳೆ ನೀರು ನಿಂತು ಕೆಸರು ಮಯವಾಗಿದೆ. ಕೂಡಲೇ ಗ್ರಾಮ ಪಂಚಾಯಿತಿ ಎಚ್ಚೆತ್ತುಕೊಂಡು ತಾತ್ಕಾಲಿಕ ಗುಂಡಿ ಮುಚ್ಚುವ ಕೆಲಸ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ರಸ್ತೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಗ್ರಾಮದಲ್ಲಿ ಜಮಾಯಿಸಿದ ಸ್ಥಳೀಯರು ಸಮಸ್ಯೆ ಬಗೆಹರಿಯದಿದ್ದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರವಾಹದಿಂದ ಮನೆ ಆಸಿ-್ತಪಾಸ್ತಿ ಕಳೆದುಕೊಂಡು ಗುಡಿಸಿಲಿನಲ್ಲಿ ವಾಸವಾಗಿದ್ದೇವೆ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಶ್ವತ ಸೂರು ಪರಿಹಾರ ಇನ್ನೂ ಸಿಕ್ಕಿಲ್ಲ. ಗಾಳಿ,ಮಳೆ,ಚಳಿಯಲ್ಲಿ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಮಹಿಳೆಯರು ಅಳಲು ತೋಡಿಕೊಂಡರು. ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಾಬು ವರ್ಗಿಸ್ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಸಮಸ್ಯೆ ಆಲಿಸಿದರು.
ನಂತರ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಕಾಡು, ಕುಂಬಾರಗುಂಡಿ, ಹೊಳೆಕೆರೆ, ಬರಡಿ ಭಾಗದ ನದಿ ದಡದ ನಿವಾಸಿಗಳಿಗೆ ಸರ್ಕಾರ ಶಾಶ್ವತ ಸೂರು ಪರಿಹಾರ ನೀಡುತ್ತಿಲ್ಲ. ಸಂತ್ರಸ್ತರಿಗಾಗಿ ಅಭ್ಯತ್ ಮಂಗಲ ಬಳಿ 8 ಎಕರೆ ಜಾಗ ಗುರುತಿಸಲಾಗಿದ್ದರೂ ಇಂದಿಗೂ ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗಿಲ್ಲ. ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಹೋರಾಟ ಸಮಿತಿ ಮೂಲಕ ಮನವಿ ಮಾಡಲಾಗಿದ್ದರೂ ಜನರ ಸಮಸ್ಯೆಗಳನ್ನ ಬಗೆಹರಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಹಲವು ಕುಟುಂಬಗಳು ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ಅಮುದಾನ ನೀಡಬೇಕು ಇತರ ಕುಟುಂಬಗಳಿಗೆ ಕೂಡಲೇ ಶಾಶ್ವತ ಸೂರು ಕಲ್ಪಿಸಬೇಕೆಂದು ಒತ್ತಾಯಿಸಿದ ಅವರು, ಹಲವು ಕಡೆ ರಸ್ತೆಗಳು ಹಾಳಾಗಿದ್ದು, ಎಲ್ಲವೂ ಗ್ರಾಮ ಪಂಚಾಯಿತಿಯಿಂದ ಮಾಡಲು ಸಾಧ್ಯವಾಗುತ್ತಿಲ್ಲ ಗ್ರಾಮದ ಸಮಸ್ಯೆಗಳನ್ನು ಮುಂದಿಟ್ಟು ಜಿಲ್ಲಾಧಿಕಾರಿಗಳು, ಶಾಸಕರು, ಸಂಸದರು ಹಾಗೂ ಅಧಿಕಾರಿಗಳನ್ನು ನಿಯೋಗದ ಮೂಲಕ ಭೇಟಿ ಮಾಡಿ ಗ್ರಾಮದ ಸಮಸ್ಯೆ ಬಗೆಹರಿಸಲು ಮುಂದಾಗುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಸ್ಥಳೀಯರಾದ ಸುನೀಲ್, ಮನು, ಲೋಕೇಶ್, ಮಾಲತಿ, ಶೋಭಾ, ಪುಷ್ಪಾ, ಲತಾ, ಪ್ರಮೀಳಾ,ಅನೀಶ್, ಶರತ್, ಸುಜಿತ್, ಮುರಳಿ, ಪ್ರವೀಣ್, ಅನಿಲ್, ವಿನು, ಅನೀಶ್, ಮಂಜು, ಸುಲೋಚನಾ, ಮತ್ತಿತರರು ಪಾಲ್ಗೊಂಡಿದ್ದರು.