ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕೆ.ಸಿ.ದಯಾನಂದ ಅಭಿಪ್ರಾಯಪಟ್ಟರು.
ಕುಶಾಲನಗರದ ಕನ್ನಡ ಸಿರಿ ಕಸಾಪ ಸ್ನೇಹ ಬಳಗ ಆಶ್ರಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ನಾವು’ ವಿಷಯದ ಕುರಿತು ಶಿಕ್ಷಕರಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಮಾತನಾಡಿದರು.
2020ರಲ್ಲಿ ಜಾರಿಗೆ ಬಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಪ್ರಥಮವಾಗಿ ಕರ್ನಾಟಕ ರಾಜ್ಯ ಅನುಷ್ಠಾನಗೊಳಿಸಿದೆ. ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ ನೀತಿ ಜಾರಿಗೊಳಿಸಲಾಗಿದೆ ಎಂದು ಅವರು ನುಡಿದರು.
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕಸಾಪ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಬಾಲಕಿಯರ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಉದ್ಘಾಟಿಸಿದರು.
ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರು, ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಶಿಕ್ಷಕರಿಗೆ ನಡೆದಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಲಾಯಿತು.
ಇದೇ ಸಂದರ್ಭ ಕಿಗ್ಗಾಲು ಗಿರೀಶ್ ಅವರ ‘ಜಾಲದಲ್ಲಿ ಸಿಲುಕಿದ ಜಾಹ್ನವಿ’ ಪತ್ತೆದಾರಿ ಕಾದಂಬರಿಯನ್ನು ಸಾಹಿತಿ ಭಾರದ್ವಾಜ್ ಕೆ ಆನಂದತೀರ್ಥ ಬಿಡಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕುಶಾಲನಗರ ರೋಟರಿ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ, ರಾಜ್ಯ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್, ಮಡಿಕೇರಿ ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಕುಡೆಕಲ್ ಸಂತೋಷ್, ಕೊಡಗು ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಮಂಜುನಾಥ್, ಜಿಎಂಪಿ ಶಾಲಾ ಮುಖ್ಯೋಪಾಧ್ಯಾಯಿನಿ ರಾಣಿ, ನಿವೃತ್ತ ಅಧಿಕಾರಿ ಶಬ್ಬೀರ್ ಪಾಷಾ, ಸಾಹಿತಿ ಕಿಗ್ಗಾಲು ಗಿರೀಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮತ್ತು ಬಳಗದ ಪ್ರಮುಖರು ಇದ್ದರು.