ಸೋಮವಾರಪೇಟೆ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ(ಸಿಐಟಿಯು) ವತಿಯಿಂದ ಇಲ್ಲಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
15ನೇ ಹಣಕಾಸು ಯೋಜನೆಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು. ನಂಜನಗೂಡಿನ ಕಳಲೆ ಗ್ರಾ.ಪಂ.ನಲ್ಲಿ ನಡೆದ ಸಿಬ್ಬಂದಿಯ ಹತ್ಯೆಯ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಳೆದ 10 ತಿಂಗಳಿನಿಂದ ವೇತನ ನೀಡದೇ ಇರುವುದನ್ನು ಪ್ರಶ್ನಿಸಿದ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು.
ತಪ್ಪಿತಸ್ಥರ ವಿರುದ್ಧ ಕಠಿಣ ಮೊಕದ್ದಮೆ ದಾಖಲಿಸಿ ಬಂಧಿಸಬೇಕು. ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
15 ಹಣಕಾಸು ಯೋಜನೆಯಡಿ ಗ್ರಾ.ಪಂ. ಸಿಬ್ಬಂದಿಗಳಿಗೆ ವೇತನ ಪಾವತಿಸುವ ಆದೇಶವಿದ್ದರೂ ಬಹುತೇಕ ಪಿಡಿಓಗಳು ವೇತನ ನೀಡುತ್ತಿಲ್ಲ. ಇದರೊಂದಿಗೆ ಜಲಜೀವನ್ ಮಿಷನ್ಗೆ ಹಣ ತುಂಬಬೇಕೆಂದು ಸಬೂಬು ಹೇಳುತ್ತಿದ್ದಾರೆ. ಕೆಲವು ಪಂಚಾಯಿತಿಗಳಲ್ಲಿ ಅಧ್ಯಕ್ಷರೂ ಸಹ ಸಹಿ ಹಾಕುತ್ತಿಲ್ಲ. ಇದರಿಂದಾಗಿ ನೌಕರರು ಸಮಸ್ಯೆ ಎದುರಿಸುವಂತಾಗಿದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್. ಭರತ್ ಆರೋಪಿಸಿದರು.
ಈ ಸಂಬಂಧಿತ ಮನವಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಅವರ ಮೂಲಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಸಂಘದ ತಾಲೂಕು ಅಧ್ಯಕ್ಷ ನವೀನ್, ಸದಸ್ಯರಾದ ಮೂರ್ತಿ, ಬಾಬು, ಕಾಶಿ, ದೊಡ್ಡಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.