ಮಡಿಕೇರಿ: ಸವಿತಾ ಸಮಾಜವನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಇದೇ ಧೋರಣೆ ಮುಂದುವರಿಸಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಕೊಡಗು ಜಿಲ್ಲಾ ಸವಿತಾ ಸಮಾಜ ಜಿಲ್ಲಾಧ್ಯಕ್ಷ ದೊರೇಶ್ ಎಚ್ಚರಿಸಿದ್ದಾರೆ.
ಮಡಿಕೇರಿ ತಾಲೂಕು ಸವಿತಾ ಸಮಾಜ ಆಶ್ರಯದಲ್ಲಿ ಮಡಿಕೇರಿ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಆವರಣದಲ್ಲಿರುವ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತಿಗೆ ಸಮಾಜದವರನ್ನು ಆಹ್ವಾನಿಸದೆ ಕಡೆಗಣಿಸಿದ್ದಾರೆಂದು ಅಸಮಾಧಾನ ವ್ಯಕ್ತ ಪಡಿಸಿದರು.
ಸರ್ಕಾರದಿಂದ ಸವಲತ್ತು ನೀಡುವ ವಿಚಾರದಲ್ಲಿಯೂ ಸರ್ಕಾರ ಸವಿತಾ ಸಮಾಜದವರನ್ನು ಕಡೆಗಣಿಸುತ್ತಿದೆ. ಚಿಕ್ಕ ಸಮಾಜ ಆಗಿರುವುದರಿಂದ ಸರ್ಕಾರ ಎಲ್ಲಾ ವಿಚಾರದಲ್ಲಿಯೂ ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಸರ್ಕಾರದ ಗಮನ ಸೆಳೆಯಲು ಹಾಗೂ ಸವಲತ್ತು ಪಡೆಯಲು ಬೀದಿಗಿಳಿದು ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ದೊರೇಶ್ ಹೇಳಿದರು.
ಸವಿತಾ ಸಮಾಜದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಮ್ಮ ಮೂಲವೃತ್ತಿ ಉಳಿಸಿಕೊಳ್ಳುವುದರೊಂದಿಗೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವತ್ತ ಗಮನ ಹರಿಸ ಬೇಕೆಂದು ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಹೇಳಿದರು. ಸವಿತಾ ಸಮಾಜದಿಂದ ಆಯೋಜಿಸುವ ಕಾರ್ಯ ಚಟುವಟಿಕೆಗಳಲ್ಲಿ ಸಮಾಜದವರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಏಪ್ರಿಲ್ 4 ಮತ್ತು 5 ರಂದು ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಡಿಕೇರಿ ತಾಲೂಕು ಸವಿತಾ ಸಮಾಜ ಆಯೋಜಿಸಿರುವ ಜಿಲ್ಲಾಮಟ್ಟದ ಕ್ರೀಡೋತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ತಾಲೂಕು ಸವಿತಾ ಸಮಾಜ ಅಧ್ಯಕ್ಷ ಎಂ.ಟಿ. ಮಧು ಮನವಿ ಮಾಡಿದರು. ಸಂಘದ ಮೂಲಕ ಸಮಾಜ ದವರು ಒಗ್ಗಟ್ಟು ಪ್ರದರ್ಶಿಸಬೇಕೆಂದರು.
ವೇದಿಕೆಯಲ್ಲಿ ಮಡಿಕೇರಿ ತಾಲೂಕು ಸವಿತಾ ಸಮಾಜದ ಉಪಾಧ್ಯಕ್ಷರಾದ ಕೆ.ಬಿ. ಮೊಣ್ಣಪ್ಪ, ಆರ್.ಬಿ. ವಸಂತಿ, ಮಹಿಳಾ ಘಟಕ ಅಧ್ಯಕ್ಷೆ ಸುಂದರಮ್ಮ, ನಗರಾಧ್ಯಕ್ಷ ಬಿ.ಆರ್. ಗಣೇಶ್, ಕ್ರೀಡಾ ಸಮಿತಿ ಅಧ್ಯಕ್ಷ ಮಧು ಚೆಟ್ಟಿಮಾನಿ ಇದ್ದರು. ಅವಿನಾಶ್ ಬೊಟ್ಲಪ್ಪ ನಿರೂಪಿಸಿದರು.