ಕುಶಾಲನಗರ : ಲಕ್ಷಾಂತರ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಪದ ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷನ ವಿರುದ್ಧ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘದ ಮಾಜಿ ಅಧ್ಯಕ್ಷ ಎಸ್ ಎನ್.ರಾಜಾರಾವ್ ಎಂಬುವರೇ ಹಣ ದುರುಪಯೋಗದ ಆರೋಪ ಎದುರಿಸುತ್ತಿದ್ದು, ಇವರ ವಿರುದ್ಧ ಹಾಲಿ ಅಧ್ಯಕ್ಷ ಆರ್.ಕೆ.ಚಂದ್ರ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ದೂರು ಸ್ವೀಕರಿದ ಪೊಲೀಸರು ಐಪಿಸಿ ಸೆಕ್ಷನ್ 406.409. ಹಾಗೂ 420 ನಿಯಮದಡಿ ಮೊಕದ್ದಮೆ ದಾಖಲಿಸಿದ್ದಾರೆ.
ಬಸವನಹಳ್ಳಿ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿದ್ದ ವೇಳೆ ರಾಜಾರಾಂ ಅವರು 23.86.550 ಲಕ್ಷ ರೂ.ಗಳನ್ನು ದುರುಪಯೋಗ ಪಡಿಸಿಕೊಂಡಿದ್ದರು. ಇದು ಅವರ ಅಧಿಕಾರವಧಿಯ ನಂತರದ ಲೆಕ್ಕ ಪರಿಶೋಧನೆ ವೇಳೆ ಬೆಳಕಿಗೆ ಬಂದಿತ್ತು. ಇದನ್ನು ಒಪ್ಪಿಕೊಂಡ ಅವರು ದುರುಪಯೋಗವಾಗಿರುವ ಹಣವನ್ನು ಸಂಘಕ್ಕೆ ಪಾವತಿ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೆ ಯಾವುದೇ ರೀತಿಯ ಹಣವನ್ನು ಅವರು ಸಂಘಕ್ಕೆ ಪಾವತಿಸಿರಲಿಲ್ಲ.
ಈ ವಿಚಾರ ಸಂಘದಲ್ಲಿ ಸದಸ್ಯರ ಅಸಮಾಧಾನಕ್ಕೆ ಕಾರಣವಾಗಿತ್ತಲ್ಲದೆ, ಹಾಲಿ ಅಧ್ಯಕ್ಷರ ಮೇಲೆ ಒತ್ತಡವೂ ಬಂದಿತ್ತು. ಹೀಗಾಗಿ ಇತ್ತೀಚೆಗೆ ಹೆಬ್ಬಾಲೆಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಮಳಿಗೆಗಳನ್ನು ಉದ್ಘಾಟಿಸಲು ಆಗಮಿಸಿದ್ದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಗಮನಕ್ಕೆ ತರಲಾಗಿತ್ತು. ಅವರು ಕೊಡಗು ಜಿಲ್ಲೆಯಲ್ಲಿ ಎರಡು ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ ವಾಗಿರುವುದರ ಬಗ್ಗೆ ತಿಳಿಸಿದ್ದರಲ್ಲದೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.
ಈ ನಡುವೆ ಸಂಘಕ್ಕೆ ಹಣ ಪಾವತಿಸದ ಹಿನ್ನಲೆಯಲ್ಲಿ ಹಾಲಿ ಅಧ್ಯಕ್ಷ ಆರ್.ಕೆ.ಚಂದ್ರ ಕುಶಾಲನಗರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಮುಂದೆ ಅವರ ವಿರುದ್ಧ ಯಾವ ರೀತಿಯ ಕ್ರಮವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಇತ್ತ ಅವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಮದಲಾಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 30 ವರ್ಷಗಳಿಂದ ಅವರೇ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅಂದಿನಿಂದ ಇಂದಿನ ವರೆಗೆ ಹಾಲು ಉತ್ಪಾದಕರ ಸಂಘದಲ್ಲಿಯೂ ದುರುಪಯೋಗ ನಡೆದಿರುವ ಸಾಧ್ಯತೆಗಳಿರುವುದರಿಂದ ಖರ್ಚು ವೆಚ್ಚಗಳ ಲೆಕ್ಕ ಪರಿಶೋಧಿಸ ಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.