ಕೊಡಗು: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯ ಪಿ ಡಿ ಓ ಮೇಲಿನ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತಾ ಸರಕಾರಿ ನೌಕರರಿಗೆ ಭದ್ರತೆ ಇಲ್ಲದಂತಾಗಿದೆ. ಇದೇ ರೀತಿ ಪ್ರಕರಣಗಳು ಮುಂದುವರಿದಲ್ಲಿ ನೌಕರರು ಯಾವ ರೀತಿ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು ಮತ್ತು ಇಂತಹ ಘಟನೆಗಳಿಂದ ಆತಂಕ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕೊಡಗು ಜಿಲ್ಲಾಧ್ಯಕ್ಷ ಹೆಚ್. ಎನ್. ಮಂಜುನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಅಧಿಕಾರಿಗಳು ಸೂಚಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸ ಬೇಕಾದ ಜವಾಬ್ದಾರಿ ನೌಕರರ ಮೇಲಿದ್ದರೆ ಸಾರ್ವಜನಿಕರ ಆಕ್ರೋಶಕ್ಕೂ ಬಲಿಯಾಗುವಂತಹ ಘಟನೆಗಳು ಜರುಗುತ್ತಿರುವುದು ಕೆಳಹಂತದ ನೌಕರರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ. ಇಂತಹ ಪ್ರಕರಣಗಳು ಹಲವಾರು ಕಡೆ ನಡೆದು ಅವಮಾನದ ಜೊತೆಗೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗುವಂತಹ ಸ್ಥಿತಿ ನಿರ್ಮಾಣವಾಗಿರುವುದು ಖಂಡಾನಾರ್ಹ.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷನಾಗಿ ಇಂತಹ ಹೇಯ ಕೃತ್ಯವನ್ನು ಖಂಡಿಸುತ್ತಾ ಹಿರಿಯ ಅಧಿಕಾರಿಗಳು ತಮ್ಮ ಕೆಳಹಂತದ ನೌಕರರಿಗೆ ಭದ್ರತೆ ಒದಗಿಸುವಂತೆ ಒತ್ತಾಯಿಸುವುದಲ್ಲದೆ ಸರಕಾರಿ ನೌಕರರ ಸಂಘ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಈ ಮೂಲಕ ಒತ್ತಾಯಿಸಿದ್ದಾರೆ.