ಮಡಿಕೇರಿ: ಕೊಡವ ಜನಾಂಗಕ್ಕೆ ಎಸ್ಟಿ ಟ್ಯಾಗ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.1 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿಎನ್ಸಿ ಬೇಡಿಕೆಗಳ ಕುರಿತು ಮತ್ತಷ್ಟು ಒತ್ತಡ ಹೇರಲು ಬೆಳಗ್ಗೆ 10.30 ಗಂಟೆಗೆ ಧರಣಿ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಕೊಡವರನ್ನು ಬುಡಕಟ್ಟು ಜನಾಂಗವೆಂದು ಅಧಿಕೃತವಾಗಿ ಘೋಷಿಸಬೇಕು, ಕೊಡವ ಭೂ ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ “ಜನಾಂಗೀಯ ಸಂಸ್ಕಾರ ಗನ್” ನ್ನು ಸಂವಿಧಾನದ 25 ಮತ್ತು 26 ನೇ ವಿಧಿಗಳಲ್ಲಿ ಅಳವಡಿಸಬೇಕು, ಕೊಡವ ಭಾಷೆಯನ್ನು 8 ನೇ ಶೆಡ್ಯೂಲ್ಗೆ ಸೇರಿಸಬೇಕು ಮತ್ತು ವಿಶಿಷ್ಟವಾದ ಕೊಡವ ಸಂಸ್ಕತಿಯನ್ನು ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.