ಮಡಿಕೇರಿ, ಆ.7: ಮಹಾಮಳೆಯ ಕಷ್ಟ, ನಷ್ಟಗಳನ್ನು ಅನುಭವಿಸಿ ರಾಜ್ಯಕ್ಕೆ ಕಾವೇರಿ ನದಿಯ ನೀರನ್ನು ಒದಗಿಸುತ್ತಿರುವ ಕೊಡಗು ಜಿಲ್ಲೆಗೆ ಮಳೆಹಾನಿ ಪರಿಹಾರವನ್ನು ನೀಡದೆ ಕಡೆಗಣಿಸಲಾಗಿದೆ ಎಂದು ಆರೋಪಿಸಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ, ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸುವುದಾಗಿ ತಿಳಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಪ್ರಧಾನ ಕಾರ್ಯದರ್ಶಿ ಸೈಯದ್ ಬಾವ, ಜಿಲ್ಲೆಗೆ ತುರ್ತಾಗಿ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಒತ್ತಾತಯಿಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರಂತರವಾಗಿ ಕೊಡಗು ಜಿಲ್ಲೆಯನ್ನು ನಿರ್ಲಕ್ಷಿಸುತ್ತಲೇ ಬರುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಳೆಹಾನಿ ಪರಿಹಾರವನ್ನು ಘೋಷಿಸಿರುವ ಮುಖ್ಯಮಂತ್ರಿಗಳು ಅತಿಹೆಚ್ಚು ಮಳೆಯಾಗುವ ಕೊಡಗನ್ನು ಕಡೆಗಣಿಸಿದ್ದಾರೆ. ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ದಿನಕ್ಕೆ 4 ರಿಂದ 10 ಇಂಚು ಮಳೆಯಾಗುತ್ತಿದ್ದು, ಜಲಸ್ಫೋಟ ಸಂಭವಿಸುತ್ತಿದೆ. ಗುಡ್ಡ ಕುಸಿತ ಮತ್ತು ಪ್ರವಾಹದಿಂದ ರಸ್ತೆ ಹಾಗೂ ಸೇತುವೆಗಳು ಕೊಚ್ಚಿ ಹೋಗಿವೆ. 2 ಸಾವಿರಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಹೋಗಿವೆ. ಸಾವಿರಾರು ಏಕರೆ ಕಾಫಿ ತೋಟ ಕೊಳೆ ರೋಗದಿಂದ ನಾಶವಾಗಿದೆ. ನೂರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ.
ಸರಣಿ ಭೂಕಂಪನ ಮತ್ತು ಜಲಸ್ಫೋಟದಿಂದ ಜನರು ಆತಂಕದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಕೊಡಗಿನ ಮೇಲೆ ಕರುಣೆಯೇ ಬರುತ್ತಿಲ್ಲ. ಜಿಲ್ಲೆಗೆ ಏನೂ ಆಗಿಲ್ಲ ಎನ್ನುವ ರೀತಿಯಲ್ಲಿ ಆಡಳಿತ ವ್ಯವಸ್ಥೆ ವರ್ತಿಸುತ್ತಿದ್ದು, ಜನರು ನಿರಾಶೆಯಿಂದಲೇೆ ದಿನ ಕಳೆಯುವಂತ್ತಾಗಿದೆ. ವೈಜ್ಞಾನಿಕ ರೂಪದಲ್ಲಿ ಮಳೆಹಾನಿಯನ್ನು ಸಮೀಕ್ಷೆ ಮಾಡಿದರೆ ಕೊಡಗು ಜಿಲ್ಲೆಯಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆಸ್ತಿಪಾಸ್ತಿಗೆ ಹಾನಿಯಾಗಿರುವುದು ಬೆಳಕಿಗೆ ಬರುತ್ತದೆ. ಆದ್ದರಿಂದ ಕೊಡಗಿಗೆ ತುರ್ತು ಪರಿಹಾರವಾಗಿ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಉಸ್ಮಾನ್ ಒತ್ತಾಯಿಸಿದ್ದಾರೆ.
ಕಳೆದ 25 ವರ್ಷಗಳಿಂದ ಜಿಲ್ಲೆ ಬಿಜೆಪಿ ಶಾಸಕರುಗಳನ್ನೇ ಗೆಲ್ಲಿಸಿಕೊಂಡು ಬರುತ್ತಿದೆ. ಆದರೆ ಮತ ನೀಡಿದ ಜನರ ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ದಸರಾಕ್ಕೆ ಅನುದಾನ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸುವಾಗ ಮುಖ್ಯಮಂತ್ರಿಗಳು ನಿರ್ಲಕ್ಷ್ಯದ ಮಾತುಗಳನ್ನಾಡಿದ್ದಾರೆ. ಆ ಸಂದರ್ಭವೇ ಜಿಲ್ಲೆಯ ಶಾಸಕರುಗಳು ಹಾಗೂ ಬಿಜೆಪಿ ಮಂದಿ ಎಚ್ಚೆತ್ತುಕೊಂಡಿದ್ದರೆ ಮಳೆಹಾನಿ ಪರಿಹಾರ ಕೊಡಗಿಗೆ ಕೂಡ ಬಿಡುಗಡೆಯಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಳೆಹಾನಿ ಪರಿಹಾರವಾಗಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ಬಿಡುಗಡೆ ಮಾಡದಿದ್ದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಜಿಲ್ಲಾ ವ್ಯಾಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಉಸ್ಮಾನ್ ಎಚ್ಚರಿಕೆ ನೀಡಿದ್ದಾರೆ.