ಮಡಿಕೇರಿ, ಏ.19: ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಸಹಯೋಗದೊಂದಿಗೆ ಅಗ್ನಿ ಅನಾಹುತ ತಡೆಯುವ ಬಗ್ಗೆ ಅಣಕು ಕಾರ್ಯಾಚರಣೆ ಬುಧವಾರ ಜರುಗಿತು.
ಕೊಡಗು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಅಣಕು ಕಾರ್ಯಾಚರಣೆ ನಡೆಯಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರ ಮಾರ್ಗದರ್ಶನದಲ್ಲಿ, ಮಡಿಕೇರಿ ಅಗ್ನಿಶಾಮಕ ಠಾಣೆಯ ಲೀಡ್ ಫೈರ್ಮೆನ್ ನಾಗರಾಜ ಪಲ್ಲೇದ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.
ನಂತರ ವಿವಿಧ ರೀತಿಯ ಅಗ್ನಿ ಅನಾಹುತ ಹಾಗೂ ಅಗ್ನಿ ನಂದಿಸುವಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರದರ್ಶನ ಮೂಲಕ ಮಾಹಿತಿ ನೀಡಲಾಯಿತು. ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಅರ್ಜುನ್ ಸಿಂಗ್ ಹಾಗೂ ಶಿಕ್ಷಕರು ಹಾಜರಿದ್ದರು.