ಮಡಿಕೇರಿ: ಮಹಾ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರದ ಮೇಲೆ ಒತ್ತಡ ಹೇರಿ ಪರಿಹಾರ ದೊರಕಿಸಿಕೊಡುವ ಸದುದ್ದೇಶದಿಂದ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಅಗೌರವ ತೋರಿರುವುದು ಖಂಡನೀಯವೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯ ಜನರ ನೋವಿಗೆ ಸ್ಪಂದಿಸುವ ಉದ್ದೇಶದಿಂದ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ತೋರಿಸಿ, ನಿಂದಿಸಿ, ಕಾರಿಗೆ ಮೊಟ್ಟೆಯನ್ನು ಎಸೆದಿರುವುದು ಬಿಜೆಪಿ ಪಕ್ಷದ ಸಂಸ್ಕತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಜನ ಸಾಮಾನ್ಯರು ಹಾಗೂ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದೆ ಅತಂತ್ರರಾಗಿದ್ದಾರೆ. ನೋವಿನಲ್ಲಿರುವ ಸಂತ್ರಸ್ತರಿಗೆ ಸಾಂತ್ವನ ಹೇಳುವುದು ಮತ್ತು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲೆಂದು ಸಿದ್ದರಾಮಯ್ಯನವರು ಆಗಮಿಸಿದ್ದರು.
ಆದರೆ ಬಿಜೆಪಿ ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸುವ ಮೂಲಕ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಯತ್ನಿಸಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ಜಿಲ್ಲೆಗಳಿಗೆ ಪರಿಹಾರ ನೀಡಿರುವ ರಾಜ್ಯ ಸರ್ಕಾರ ಕೊಡಗನ್ನು ಕಡೆಗಣಿಸಿದೆ. ಈ ಬಗ್ಗೆ ಜಿಲ್ಲೆಯ ಜನರಿಗೆ ತೀವ್ರ ಅಸಮಾಧಾನವಿದೆ. ಸಿದ್ದರಾಮಯ್ಯ ಅವರ ಭೇಟಿಯಿಂದ ರಾಜಕೀಯವಾಗಿ ಮತ್ತಷ್ಟು ನಷ್ಟವಾಗಬಹುದೆನ್ನುವ ಹತಾಶ ಮನೋಭಾವದಿಂದ ಬಿಜೆಪಿ ಮಂದಿ ಅತ್ಯಂತ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಸುರೇಶ್ ಆರೋಪಿಸಿದ್ದಾರೆ.