ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ಸಿಗರು ಘೋಷಣೆಗಳನ್ನು ಕೂಗಿದಾಗ ಕೆಲವು ಪೊಲೀಸ್ ಅಧಿಕಾರಿಗಳು ಏಕಪಕ್ಷೀಯವಾಗಿ ನಡೆದುಕೊಂಡು ನಮ್ಮ ವಿರುದ್ಧ ಹರಿಹಾಯ್ದಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಬಾಷಾ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಿದ್ದರಾಮಯ್ಯ ಅವರು ಮಳೆಹಾನಿ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿ ಹೆಚ್ಚಿನ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಬಂದಿದ್ದರೇ ಹೊರತು ರಾಜಕೀಯ ಮಾಡಲು ಅಲ್ಲ. ವಿರೋಧ ಪಕ್ಷದ ನಾಯಕರೊಬ್ಬರು ಜಿಲ್ಲೆಗೆ ಭೇಟಿ ನೀಡಿದಾಗ ಬಿಜೆಪಿ ಮಂದಿ ಅಗೌರವದಿಂದ ನಡೆದುಕೊಂಡಿದ್ದಲ್ಲದೆ ಕಾನೂನಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಅತಿರೇಕದ ವರ್ತನೆ ತೋರಿದಾಗ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದ ಪೊಲೀಸರು ಘೋಷಣೆಗಳನ್ನು ಕೂಗುತ್ತಿದ್ದ ನಮ್ಮ ಕಡೆಗೆ ಬಂದು ಹರಿಹಾಯ್ದಿದ್ದಾರೆ. ಇದನ್ನು ಪ್ರಶ್ನೆ ಮಾಡಿದಕ್ಕೆ ಪೊಲೀಸ್ ಅಧಿಕಾರಿಯೊಬ್ಬರು “ನಮ್ಮ ಇಷ್ಟ” ಎಂದು ಗದರಿದ್ದಾರೆ. ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿರುವ ಈ ರೀತಿಯ ಅಧಿಕಾರಿಗಳಿಂದ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಸಿದ್ದರಾಮಯ್ಯ ಅವರು ಬಂದಾಗ ನಡೆದ ಘಟನಾವಳಿಗಳ ಕುರಿತು ಕೆಲವು ಪೊಲೀಸ್ ಅಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದರಿಂದ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವ ಎಸ್ಪಿ ಅವರ ಹೆಸರಿಗೆ ಕಳಂಕ ಬರುತ್ತಿದೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಅವರು ಭೇಟಿ ನೀಡಿದ ಸಂದರ್ಭ ನಡೆದ ಪ್ರತಿಭಟನೆಗಳ ದೃಶ್ಯವನ್ನು ಪೊಲೀಸ್ ಇಲಾಖೆ ಸೆರೆ ಹಿಡಿದಿದೆ. ಈ ದೃಶ್ಯಗಳನ್ನಾಧರಿಸಿ ಕಾನೂನು ಉಲ್ಲಂಘಿಸಿದ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ಪೊಲೀಸರಿಗೆ ಸರ್ಕಾರ ಸ್ವಾತಂತ್ರ್ಯ ನೀಡಬೇಕು ಎಂದು ಖಲೀಲ್ ಬಾಷಾ ಒತ್ತಾಯಿಸಿದ್ದಾರೆ.