ಮಡಿಕೇರಿ: ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಇದರಿಂದ ಹಲವು ರೀತಿಯ ಅನಾಹುತಗಳು ಸೃಷ್ಠಿಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಳಿಬೀಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಬ್ರಹ್ಮಣ್ಯ ಸಮೀಪದ ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಉಂಟಾಗಿರುವ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಸತತ ಸುರಿಯುತ್ತಿರುವ ಮಳೆಯಿಂದಾಗಿ 5 ಮನೆಗಳಿಗೆ ಹಾನಿಯಾಗಿದ್ದು, ಕೂಡಲೇ ಪರಿಹಾರ ವಿತರಿಸುವಂತೆ ಶಾಸಕರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ವ್ಯಾಪಕ ಮಳೆಯಿಂದಾಗಿ ಕೃಷಿ ಬೆಳೆಗೆ ಹಾನಿಯಾಗಿದ್ದು, ಕೃಷಿ ಬೆಳೆ ಹಾನಿಗೆ ಪರಿಹಾರ ವಿತರಿಸಬೇಕು. ಸುಬ್ರಹ್ಮಣ್ಯ ಕಡಮಕಲ್ಲು ಮಾರ್ಗ ರಸ್ತೆ ಮತ್ತು ಸೇತುವೆ ಹಾನಿಯಾಗಿದ್ದು, ಇದನ್ನು ತಕ್ಷಣವೇ ಸಂಬಂಧಪಟ್ಟ ಇಲಾಖೆ ಇಂಜಿನಿಯರ್ಗಳು ಸರಿಪಡಿಸಿವಂತೆ ಸೂಚಿಸಿದರು. ಕಡಮಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ಆಗಬೇಕಿರುವ ಮೂಲ ಸೌಲಭ್ಯ ಸಂಬಂಧ ಗ್ರಾಮಸ್ಥರಿಂದ ಇದೇ ಸಂದರ್ಭದಲ್ಲಿ ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಇನ್ನೂ ಒಂದು ವಾರಗಳ ಕಾಲ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರ ವಹಿಸಬೇಕು. ಮನೆ ಹಾಗೂ ಬೆಳೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗುವುದು ಎಂದರು.
ಇದೇ ವೇಳೆ ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದ ದೇವರಕೊಲ್ಲಿ ಬಳಿ ರಸ್ತೆ ಬಿರುಕು ಬಿಟ್ಟಿರುವ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ವೀಕ್ಷಿಸಿದರು. ಬಳಿಕ ಕೊಯನಾಡು ಸೇತುವೆಯ ಹಿಂಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪರಿಶೀಲಿಸಿದರು. ರಸ್ತೆ ಬಿರುಕು ಸಂಬಂಧಿಸಿದಂತೆ ಕೂಡಲೇ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಇ ಜಿ.ಎನ್.ಹೆಗಡೆಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಈ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಂದೇ ದಿನದಲ್ಲಿ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 128 ಮಿ.ಮೀ. ಮಳೆಯಾಗಿದ್ದು, ಚೆಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಕೆಲವು ಕಡೆ ಬರೆ ಕುಸಿದಿದೆ. ಹಾಗೆಯೇ ಮದೆ ಗ್ರಾ.ಪಂ.ವ್ಯಾಪ್ತಿಯ ಬೆಟ್ಟತ್ತೂರು ಗ್ರಾಮದ ಬಲೆಕಂಡಿಯಲ್ಲಿ ರಸ್ತೆಗೆ ಮಣ್ಣು ಕುಸಿದಿದ್ದು, ಜೆಸಿಬಿ ಮೂಲಕ ಮಣ್ಣು ಸರಿಪಡಿಸುವ ಕಾರ್ಯ ನಡೆದಿದೆ. ಒಟ್ಟಾರೆ ಮತ್ತೆ ಮಳೆ ಅಬ್ಬರಿಸುತ್ತಿರುವುದು ಈ ವ್ಯಾಪ್ತಿಯ ಜನರಲ್ಲಿ ಭಯವನ್ನುಂಟು ಮಾಡಿದೆ.