ಮಡಿಕೇರಿ, ಸೆ.24: ನಾಡಹಬ್ಬ ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಡವ ಚಲನಚಿತ್ರ “ನಾಡ ಪೆದ ಆಶಾ” ಆಯ್ಕೆಯಾಗಿದೆ. ಸೆ.26 ರಿಂದ ಅ.3 ರವರೆಗೆ ಚಲನಚಿತ್ರೋತ್ಸವ ನಡೆಯಲಿದ್ದು, ಸೆ.29 ರಂದು “ನಾಡ ಪೆದ ಆಶಾ” ಪ್ರದರ್ಶನಗೊಳ್ಳಲಿದೆ.
ಕನ್ನಡ ಮತ್ತು ಕೊಡವ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ VK3 PICTURES ಬ್ಯಾನರ್ ನ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಾಣದ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯಿಂದ ಪ್ರಶಸ್ತಿ ಪಡೆದ ಸಾಹಿತಿ ನಾಗೇಶ್ ಕಾಲೂರು ಅವರ ಕಾದಂಬರಿ ಆಧಾರಿತ ಚಿತ್ರ ಈಗಾಗಲೇ ದೆಹ್ರಡೂನ್, ಚಂಡೀಗಡ್, ಕೊಲ್ಕತ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದೆ.
ಇದೀಗ “ನಾಡ ಪೆದ ಆಶಾ” ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಸೆ.29 ರಂದು ಸಂಜೆ 4 ಗಂಟೆಗೆ ಮಾಲ್ ಆಫ್ ಮೈಸೂರ್ ನ INOX ಥೀಯೇಟರ್ ನಲ್ಲಿ ಪ್ರದರ್ಶನಗೊಳ್ಳುತ್ತಿದೆ. ಕಲಾವಿದರುಗಳಾದ ಬೊಳ್ಳಜಿರ ಬಿ.ಅಯ್ಯಪ್ಪ, ಅಡ್ಡಂಡ ಅನಿತಾ ಕಾರ್ಯಪ್ಪ, ರಿಷಿ ಪೂವಮ್ಮ ಪ್ರಮುಖ ಪಾತ್ರದಲ್ಲಿರುವ ಈ ಚಿತ್ರ ಅತ್ಯಂತ ಜನಪ್ರಿಯತೆ ಪಡೆದ ಕೊಡವ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಕೊಡವ ಚಿತ್ರವೊಂದು ಪ್ರದರ್ಶನಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವೆಂದು ಹರ್ಷ ವ್ಯಕ್ತಪಡಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಎಲ್ಲರೂ ಚಿತ್ರವನ್ನು ವೀಕ್ಷಿಸುವ ಮೂಲಕ ದಸರಾ ಸಂಭ್ರಮವನ್ನು ಹಂಚಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.