ಮಡಿಕೇರಿ, ಸೆ.28: ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್ಎಸ್ಎಲ್ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ.85 ಮೇಲ್ಪಟ್ಟು ಹಾಗೂ ನಗರ ವಿಭಾಗ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿಇಟಿ ಯಲ್ಲಿ 1000 ರ್ಯಾಂಕ್ ಒಳಗೆ ಮತ್ತು ಎನ್ಇಇಟಿ ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುತ್ತಿದ್ದು, ಆಸಕ್ತರು 2023 ಜ.15 ರೊಳಗೆ ಅಂಕಪಟ್ಟಿಯ ಪ್ರತಿಯೊಂದಿಗೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ.
ಇದರೊಂದಿಗೆ ವೈದ್ಯಕೀಯ, ಇಂಜಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ಜ.15 ರೊಳಗೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು.
75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಅ.23 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಎಲ್ಕೆಜಿ ಯಿಂದ 1ನೇ ತರಗತಿ ಮಕ್ಕಳಿಗೆ ಸ್ವಾತಂತ್ರ ಹೋರಾಟಗಾರರ ಬಗ್ಗೆ ಛದ್ಮವೇಷ ಸ್ಪರ್ಧೆ, 2 ರಿಂದ 4ನೇ ತರಗತಿವರೆಗಿನ ಮಕ್ಕಳಿಗೆ 75ನೇ ಸ್ವಾತಂತ್ರೋತ್ಸವದ ಬಗ್ಗೆ ಚಿತ್ರಕಲೆ ಸ್ಪರ್ಧೆ, 5 ರಿಂದ 7ನೇ ತರಗತಿ ಮಕ್ಕಳಿಗೆ ಸಾಮಾನ್ಯ ಜ್ಞಾನ ಸ್ಪರ್ಧೆ, 8 ರಿಂದ 10ನೇ ತರಗತಿ ಮಕ್ಕಳಿಗೆ 75ನೇ ಸ್ವಾತಂತ್ರೋತ್ಸವದ ಬಗ್ಗೆ ಭಾಷಣ ಸ್ಪರ್ಧೆ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸ್ಪರ್ಧಾಳುಗಳ ಪೋಷಕರಿಗೆ ದೇಶ ಭಕ್ತಿ ಗೀತೆ ಸ್ಪರ್ಧೆ ನಡೆಯಲಿದೆ.
ಆಸಕ್ತರು ಅ.23 ರಂದು ಬೆಳಗ್ಗೆ 9.30 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧೆಡೆಗಳಿಂದ ಸ್ಪರ್ಧೆಗಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.