ಮಡಿಕೇರಿ, ಸೆ.1: ಎಎನ್ಎಂ ಶುಶ್ರೂಶಕಿಯರ ತರಬೇತಿಯ ಪ್ರಮಾಣಪತ್ರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾನ್ಯತೆ ನೀಡಿ ಉದ್ಯೋಗ ಒದಗಿಸಬೇಕೆಂದು ಒತ್ತಾಯಿಸಿ ‘ಕೊಡಗು ಎಎನ್ಎಂ ಅಸೋಸಿಯೇಷನ್’ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಶುಶ್ರೂಶಕಿಯರು ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು.
ಅಸೋಸಿಯೇಷನ್ ಅಧ್ಯಕ್ಷರಾದ ಭಾಗ್ಯಶ್ರೀ ಮಾತನಾಡಿ, ಎಎನ್ಎಂ ಶುಶ್ರೂಶಕಿಯರಾಗಿ ತರಬೇತಿ ಪಡೆದವರ ಪ್ರಮಾಣ ಪತ್ರಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಾನ್ಯತೆ ನೀಡುತ್ತಿಲ್ಲ. ಇದರಿಂದ ತರಬೇತಿ ಪಡೆದವರು ಉದ್ಯೋಗ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ತರಬೇತಿ ಪಡೆಯುತ್ತಿರುವವರು ಗೊಂದಲಕ್ಕೀಡಾಗಿದ್ದು, ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಕಷ್ಟು ಮಂದಿ ಸಾಲ ಮಾಡಿ ಎಎನ್ಎಂ ಶುಶ್ರೂಶಕಿಯರ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಆದರೆ ಇವರ ಶಿಕ್ಷಣಕ್ಕೆ ಮಾನ್ಯತೆ ಇಲ್ಲದಾಗಿದೆ, ಈಗಾಗಲೆ ತರಬೇತಿ ಪಡೆದಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಅಧಿಕೃತ ಮುದ್ರೆ ಇರುವ ಪ್ರಮಾಣ ಪತ್ರ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು.
ಎಎನ್ಎಂ ಶುಶ್ರೂಶಕಿಯರ ತರಬೇತಿ ನೀಡುವ ಸಂಸ್ಥೆಗಳಿಗೆ ಸರ್ಕಾರದ ಮಾನ್ಯತೆ ಪಡೆದು ತರಬೇತಿ ನೀಡುವಂತೆ ಸ್ಪಷ್ಟ ಆದೇಶವನ್ನು ನೀಡಬೇಕು. ಇಲ್ಲವಾದಲ್ಲಿ ತರಬೇತಿ ಪಡೆದ ಶುಶ್ರೂಶಕಿಯರು ಯಾವುದೇ ಕೆಲಸವಿಲ್ಲದೆ ತೊಂದರೆಗೆ ಸಿಲುಕುತ್ತಾರೆ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು.
ಸರ್ಕಾರ ಮತ್ತು ಆರೋಗ್ಯ ಇಲಾಖೆ ಸ್ಪಂದನೆ ನೀಡದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಹಾಗೂ ಕೊಡಗಿನ ವಿವಿಧೆಡೆಯಿಂದ ಆಗಮಿಸಿದ್ದ ಎಎನ್ಎಂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಬೇಡಿಕೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಆರೋಗ್ಯಾಧಿಕಾರಿಗಳ ಗಮನ ಸೆಳೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸ್ಪಂದಿಸದ ಡಿಹೆಚ್ಒ
ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಸ್ಥಳಕ್ಕೆ ಬಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಅವರನ್ನು ಭೇಟಿಯಾಗಿ ಬೇಡಿಕೆಯ ಕುರಿತು ಗಮನ ಸೆಳೆದರೂ ಯಾವುದೇ ಸ್ಪಂದನೆ ನೀಡಿಲ್ಲ. ಇದಕ್ಕೂ ನಮಗೂ ಸಂಬಂಧವಿಲ್ಲ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತನ್ನಿ, ಈ ಬೇಡಿಕೆ ಬಗ್ಗೆ ನನಗೆ ತಿಳಿದೇ ಇಲ್ಲವೆಂದು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಹಿಂದೆ ಪ್ರತಿಭಟನೆ ನಡೆಸಿದಾಗ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ, ಅಲ್ಲದೆ ಪತ್ರಿಕೆಗಳ ಮೂಲಕ ಗಮನ ಸೆಳೆಯಲಾಗಿದೆ. ಆದರೆ ಈಗ ನನಗೆ ಏನು ತಿಳಿದಿಲ್ಲವೆಂದು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.