ಮಡಿಕೇರಿ, ಸೆ.16: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ, ನಗರದ ಅಬ್ರಾರ್ ಇಂಜಿನಿಯರಿಂಗ್ ಕಾರ್ಪೋರೇಷನ್ ಕಾರ್ಯನಿರ್ವಾಹಕ ಪಾಲುದಾರರು ಹಾಗೂ ಸಮಾಜ ಸೇವಕರಾದ ಸುರಯ್ಯ ಅಬ್ರಾರ್ ಅವರಿಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಶ್ರೇಷ್ಠ ಇಂಜಿನಿಯರ್ ಪ್ರಶಸ್ತಿ ಲಭಿಸಿದೆ.
ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆ ಬೆಂಗಳೂರಿನಲ್ಲಿ ಆಯೋಜಿಸಿದ್ದ 55ನೇ ಇಂಜಿನಿಯರ್ಸ್ ದಿನಾಚರಣೆಯಲ್ಲಿ ಸುರಯ್ಯರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರಶಸ್ತಿ ಪ್ರದಾನ ಮಾಡಿದರು.
ಶಿವಾಜಿ ನಗರದ ಶಾಸಕ ರಿಜ್ವಾನ್ ಹರ್ಷದ್, ದಿ ಇನ್ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಎಂ.ಲಕ್ಷ್ಮಣ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಇಂಜಿನಿಯರ್ ಪದವೀಧರರಾಗಿರುವ ಸುರಯ್ಯ ಅಬ್ರಾರ್ ಕೊಡಗು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಗುಣಮಟ್ಟದ ಕಟ್ಟಡಗಳನ್ನು ನಿರ್ಮಿಸಿ ಗಮನ ಸೆಳೆದಿದ್ದಾರೆ. ಸಮಾಜಸೇವೆಯೊಂದಿಗೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
“ಈ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ, ಅಲ್ಲದೆ ಇಂಜಿನಿಯರಿಂಗ್ ವೃತ್ತಿಯಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ತುಂಬಿದೆ” ಎಂದು ಸುರಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.